Kanakagiri | ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಚಾಲಕ ಪಾರು, ವಾಹನ ಜಖಂ

ಕನಕಗಿರಿ : ಪಟ್ಟಣದ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದ ಕನಕಗಿರಿ–ಕೊಪ್ಪಳ ರಸ್ತೆಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಜಖಂಗೊಂಡು ಜೋಡಿ ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಎಮಿಗನೂರು ಗ್ರಾಮದ ಭಾಷಾ ಮಾಬುಸಾಬ್ ಎಂಬವರು ಮುಸಲಾಪುರ ಗ್ರಾಮದಿಂದ ಕನಕಗಿರಿ ಪಟ್ಟಣದತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದ್ದರೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಕಂಡ ಸ್ಥಳೀಯರು ತಕ್ಷಣವೇ ಗಾಯಾಳು ಚಾಲಕನನ್ನು ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಜೆಸ್ಕಾಂ ಇಲಾಖೆಯ ಜೆಇ ಸಿದ್ದಲಿಂಗಯ್ಯ ಹಾಗೂ ಸಿಬ್ಬಂದಿ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಪಟ್ಟಣದಲ್ಲಿ ಕೆಲವು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಯಿತು.
ಘಟನೆ ಕುರಿತು ಪೊಲೀಸ್ ಇಲಾಖೆ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ಕ್ರಮ ಕೈಗೊಂಡಿದೆ.




