Koppal | ಬಸವಣ್ಣ, ಬುದ್ಧ, ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಕೊಪ್ಪಳ : ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಜಗಜ್ಯೋತಿ ಬಸವಣ್ಣ, ಗೌತಮ ಬುದ್ಧ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಜನಪರ, ಪ್ರಗತಿಪರ, ದಲಿತಪರ ಹಾಗೂ ಕಾನೂನು ವಿದ್ಯಾರ್ಥಿಗಳ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಕೊಪ್ಪಳದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉಪ ತಹಶೀಲ್ದಾರ್ ಜಿ. ಸತೀಶ್ ಅವರ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರ ಆರೋಪದಂತೆ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ದೊಡ್ಡಯಚೇನಹಳ್ಳಿ ಗ್ರಾಮದ ‘ವೇದಮೂರ್ತಿ’ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಬಸವಣ್ಣ, ಬುದ್ಧ, ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದರೂ, ಯಾವುದೇ ಸಮುದಾಯದ ವಿರುದ್ಧ ದ್ವೇಷ ಹರಡುವ ಅಥವಾ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಆರೋಪಿಯ ವಿರುದ್ಧ ಸೂಕ್ತ ಕಾನೂನುಗಳಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಆರೋಪಿಯ ವಿರುದ್ಧ ರೌಡಿಶೀಟರ್ ತೆರೆಯಬೇಕು ಹಾಗೂ ಅಗತ್ಯವಿದ್ದರೆ ರಾಜ್ಯದಿಂದ ಗಡಿಪಾರು ಮಾಡಬೇಕು. ಭಾರತೀಯ ನ್ಯಾಯ ಸಂಹಿತೆ (BNS), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಗತಿಪರ ಚಿಂತಕ ಧರ್ಮರಾಜ ಗೋನಾಳ ಮಾತನಾಡಿ, ಬಸವಣ್ಣ, ಬುದ್ಧ ಹಾಗೂ ಅಂಬೇಡ್ಕರ್ ಅವರಂತಹ ಮಹನೀಯರನ್ನು ಅವಹೇಳನ ಮಾಡುವುದು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವ ಕೃತ್ಯವಾಗಿದ್ದು, ಸರ್ಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಜನಪರ ಚಿಂತಕಿ ಸಲ್ಮಾ ಜಾನ್ ಮಾತನಾಡಿ, ಮಹನೀಯರು ಮತ್ತು ದಲಿತ ಸಮುದಾಯದ ವಿರುದ್ಧ ದ್ವೇಷದ ವಾತಾವರಣ ಸೃಷ್ಟಿಸುವ ಪ್ರಯತ್ನವನ್ನು ಖಂಡಿಸಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದು, ಇಂತಹ ಕೃತ್ಯಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್. ಎ. ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ್, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ಕಾದ್ರೋಳಿ ಬಣ) ಜಿಲ್ಲಾಧ್ಯಕ್ಷ ನಿಂಗಪ್ಪ ಜಿ. ಎಸ್. ಬೆಣಕಲ್, ಕಾನೂನು ವಿದ್ಯಾರ್ಥಿಗಳ ಸಂಘಟನೆಯ ಸಂಚಾಲಕ ಹನುಮೇಶ ಛಲವಾದಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಮುದುಕಪ್ಪ ಹೊಸಮನಿ, ದಲಿತ ಯುವ ವೇದಿಕೆ ಸಂಚಾಲಕ ಸುಂಕಪ್ಪ ಮೀಸಿ, ಯಲ್ಲಪ್ಪ ಮ್ಯಾಗಳಕೇರಿ, ಭೀಮಾಶಂಕರ ಪಾಣೇಗಾಂವ, ಚಂದ್ರು ಆರ್. ಭಾನಾಪುರ, ಮಾರುತಿ ಚಂಡೂರ್, ದಿಲ್ ಶಾದ ನದಾಫ್, ಕರಿಯಪ್ಪ ಮಣ್ಣಿನವರ, ಶಶಿಕಲಾ ಮಠದ, ಸೇರಿದಂತೆ ಹಲವು ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.






