Koppal | ಗಂಗಾವತಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಗಂಗಾವತಿ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಗಂಗಾವತಿ ನಗರದ ಪ್ರಶಾಂತ ನಗರದಲ್ಲಿ ನಡೆದಿದೆ.
ಮೃತರನ್ನು ಪ್ರಕಾಶ್ ರಾಯ್ಕರ್ (54), ಪತ್ನಿ ಪ್ರಭಾ (46) ಹಾಗೂ ಪುತ್ರ ಶಶಾಂಕ್ (21) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಜ್ಯುವೆಲ್ಲರಿ ಅಂಗಡಿ ನಡೆಸುತ್ತಿದ್ದ ಪ್ರಕಾಶ್ ರಾಯ್ಕರ್ ಅವರು ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಪಡೆದಿದ್ದರು. 2021ರಲ್ಲಿ ಸಾಲ ತೀರಿಸಲು ತಮ್ಮ ಮನೆಯನ್ನು ಮಾರಾಟ ಮಾಡಿದ್ದರೂ ಆರ್ಥಿಕ ಸಂಕಷ್ಟ ಮುಂದುವರಿದಿತ್ತು ಎನ್ನಲಾಗಿದೆ.
ಶುಕ್ರವಾರ ಕಾರಿನಲ್ಲಿ ಬಂದಿದ್ದ ಕುಟುಂಬದ ಮೂವರು ತಾವು ಹಿಂದೆ ಮಾರಾಟ ಮಾಡಿದ್ದ ಮನೆಯ ಹಿಂದಿನ ಬಾಗಿಲು ಒಡೆದು ಒಳಗೆ ಪ್ರವೇಶಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ತಿಳಿಸಿದ್ದಾರೆ.
ಮೃತ ಶಶಾಂಕ್ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ನಾಲ್ಕು ದಿನಗಳ ಹಿಂದಷ್ಟೇ ಗಂಗಾವತಿಗೆ ಬಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕಾಶ್ ಅವರ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






