Koppal | ಬಸ್ ಹತ್ತುವ ವೇಳೆ ನೂಕುನುಗ್ಗಲು: ಮಹಿಳೆ ಮೃತ್ಯು

ಕೊಪ್ಪಳ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಇರಕಲ್ಗಡ ಗ್ರಾಮದ ಯಮನಮ್ಮ ತಾಳಿಕೇರಿ (ಸುಮಾರು 55) ಎಂದು ಗುರುತಿಸಲಾಗಿದೆ.
ಯಮನಮ್ಮ ಅವರು ಮೊಮ್ಮಗನನ್ನು ತಳಕಲ್ ಗ್ರಾಮದ ಎಂಎಂಡಿಆರ್ಎಸ್ ಮುರಾರ್ಜಿ ವಸತಿ ಶಾಲೆಗೆ ಬಿಟ್ಟು ಕೊಪ್ಪಳಕ್ಕೆ ಬಂದಿದ್ದರು. ಬಳಿಕ ಸ್ವಗ್ರಾಮ ಇರಕಲ್ಗಡಕ್ಕೆ ತೆರಳಲು ಬಸ್ ಹತ್ತುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬೆಳಿಗ್ಗೆ 10ರಿಂದ 11 ಗಂಟೆಯ ನಡುವೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಡುವೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಯಮನಮ್ಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಯಮನಮ್ಮ ಅವರು ಇರಕಲ್ಗಡ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಹಲವು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮಗನನ್ನು ಕಳೆದುಕೊಂಡಿದ್ದ ಅವರು, ಸೊಸೆ ಹಾಗೂ ಮೊಮ್ಮಗನೊಂದಿಗೆ ವಾಸವಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಗೆ ಬಸ್ ನಿಲ್ದಾಣದ ನಿರ್ವಹಣೆ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಬಸ್ ಹತ್ತಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಾಗಿತ್ತು. ಆದರೆ ವ್ಯವಸ್ಥೆಯ ಕೊರತೆಯಿಂದ ನೂಕುನುಗ್ಗಲು ಉಂಟಾಗಿ ದುರ್ಘಟನೆ ಸಂಭವಿಸಿದೆ ಎಂದು ದೂರಿದ್ದಾರೆ.
ಸಂಬಂಧಿಕರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಘಟನೆಯ ನಿಖರ ಕಾರಣ ಪತ್ತೆಹಚ್ಚಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.






