ಕೊಪ್ಪಳ | ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಬಸನಗೌಡ ಪಾಟೀಲ್ ಯತ್ನಾಳ್
ಕೊಪ್ಪಳ: ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದಡಿ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ಕಲಾಂ ಎಂಬುವವರು ನೀಡಿದ ದೂರಿನ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆ.11ರಂದು ಕೊಪ್ಪಳ ನಗರದ ಕುರುಬರ ಓಣಿಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಭೇಟಿ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್, ʼಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.ಗಳ ನಗದು ಪ್ರೋತ್ಸಾಹ ಧನ ನೀಡಲಾಗುವುದುʼ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ, ದಿನ ಪತ್ರಿಕೆ, ಸುದ್ದಿ ಮಾಧ್ಯಮಗಳಲ್ಲಿ, ರಾಜ್ಯ ಮಟ್ಟದಲ್ಲಿ ಹರಿದಾಡುತ್ತಿದೆ ಮತ್ತು ಹಲವಾರು ಪತ್ರಿಕೆಗಳಲ್ಲಿ, ಪ್ರಕಟಣೆಗೊಂಡಿದೆ.
ಶಾಸಕ ಯತ್ನಾಳ್ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷಾಸೂಯೆ ಬೆಳೆಸುವಂತೆ ಮಾಡಿದೆ. ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವಮಾನ ಮಾಡಿದ್ದಾರೆ ಮತ್ತು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವುದಲ್ಲದೇ ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡಿರುದ್ದಾರೆ ಎಂದು ಅಬ್ದುಲ್ ಕಲಾಂ ದೂರಿನಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ, ಎರಡು ಕೋಮುಗಳ ನಡುವೆ ಪ್ರಚೋದನೆ ನೀಡಿ ಸಂಘರ್ಷಕ್ಕೆ ಕಾರಣವಾಗುವಂತೆ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಕೊಪ್ಪಳ ನಗರ ಠಾಣೆಯಲ್ಲಿ ಗುನ್ನ ನಂ.99/2025 ಕಲಂ, 196(1)(a), 299, 353(2) ಭಾರತೀಯ ನ್ಯಾಯ ಸಂಹಿತೆ-2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.







