ಕೊಪ್ಪಳ | ಕೆಪಿಎಸ್ಸಿ ನೇಮಕಾತಿ ಹಗರಣ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಹಗರಣವನ್ನು ಖಂಡಿಸಿ, ಪ್ರಕರಣದ ಸಂಪೂರ್ಣ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಜಿಲ್ಲಾ ಸಮಿತಿ ವತಿಯಿಂದ ಬುಧವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಂತರ ಉಪತಹಸೀಲ್ದಾರ್ ಪರಶುರಾಮ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ‘ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಸರ್ಕಾರಿ ಉದ್ಯೋಗ ಪಡೆಯಲು ವರ್ಷಗಟ್ಟಲೆ ಪರಿಶ್ರಮಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿಗೆ ಸಂಬಂಧಿಸಿದಂತೆ ಹಣದ ವ್ಯವಹಾರ, ಮಧ್ಯವರ್ತಿಗಳ ಹಸ್ತಕ್ಷೇಪ ಹಾಗೂ ನೇಮಕಾತಿ ಅಕ್ರಮಗಳ ಆರೋಪಗಳು ಕೇಳಿಬಂದಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ’ ಎಂದರು.
‘ಇದು ಕೇವಲ ಒಂದು ನೇಮಕಾತಿಗೆ ಸೀಮಿತವಾದ ವಿಚಾರವಲ್ಲ. ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಯುವಜನರ ವಿಶ್ವಾಸದ ಪ್ರಶ್ನೆಯಾಗಿದೆ. ಹಣ ಅಥವಾ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಬಾರದು. ವರ್ಷಗಟ್ಟಲೆ ಓದಿ ಪರೀಕ್ಷೆ ಬರೆಯುತ್ತಿರುವ ಬಡ ರೈತರು, ಕಾರ್ಮಿಕರು, ದಲಿತರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬಾರದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ಮುಖಂಡ ನಾಗರಾಜ್ ಯು ಮಾತನಾಡಿ, ‘400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದ ಕುರಿತು ಸಿಐಡಿ ತನಿಖೆ ನಡೆಸುತ್ತಿದ್ದು,ಈಡಿ ಕೂಡ ಹಣಕಾಸಿನ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವುದನ್ನು ಎಸ್ ಎಫ್ ಐ ಸ್ವಾಗತಿಸುತ್ತದೆ. ಆದರೆ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕು’ ಎಂದರು.
‘ಓಎಂಆರ್ ತಿದ್ದುಪಡಿ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಕೇಳಿಬಂದಿರುವ ಎಲ್ಲ ಆರೋಪಗಳ ಕುರಿತು ಯಾವುದೇ ಒತ್ತಡ ಅಥವಾ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು. ಹಗರಣದಿಂದ ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ಸಂಬಂಧಿಸಿದ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಎಐ ಎ ಡಬ್ಲ್ಯೂಯು ಸಂಘದ ಮುಖಂಡ ಸುಂಕಪ್ಪ ಗದಗ, ವಿದ್ಯಾರ್ಥಿಗಳಾದ ಅಕ್ಷಯ್, ಆಕಾಶ್, ಸೌಮ್ಯ, ನಿರಂಜನ, ಮಂಜುಳಾ, ಅನಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು.






