ಕುಕನೂರು | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಕುಕನೂರು: ತಾಲೂಕಿನ ಇಟಗಿ ಗ್ರಾಮದಲ್ಲಿ ಶೆಡ್ ನಿರ್ಮಾಣ ಕಾಮಗಾರಿ ವೇಳೆ 11 ಕೆವಿ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಈ ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.
ಮೃತರನ್ನು ಇಟಗಿ ಗ್ರಾಮದ ನಾಗರಾಜ ಚನ್ನಪ್ಪ ಚಕ್ರಸಾಲಿ (36) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಪತ್ನಿ ನಾಗರತ್ನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಬಸವರಾಜ ಅಡಿವೆಪ್ಪನವರ್ ಅವರ ಜಾಗದಲ್ಲಿ ನಿರ್ಮಾಣವಾಗುತ್ತಿದ್ದ ಶೆಡ್ಗೆ ಕಬ್ಬಿಣದ ಪೈಪ್ ಅಳವಡಿಸುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕನಕರಾಜ ಭೋವಿ ಅವರ ಮನೆಯಿಂದ ತಂದಿದ್ದ ಕಬ್ಬಿಣದ ಏಣಿಯನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲಿ ಅದು ಮೇಲ್ಭಾಗದಲ್ಲಿ ಹಾದು ಹೋಗಿದ್ದ 11 ಕೆವಿ ವಿದ್ಯುತ್ ತಂತಿಗೆ ತಗುಲಿತು. ಪರಿಣಾಮ ತೀವ್ರ ವಿದ್ಯುತ್ ಪ್ರವಹಿಸಿ ನಾಗರಾಜ ಸ್ಥಳದಲ್ಲೇ ಮೃತಪಟ್ಟರು.
ಮೃತನ ಸಹೋದರ ಶರಣಪ್ಪ ಚಕ್ರಸಾಲಿ ನೀಡಿದ ದೂರಿನಲ್ಲಿ, ತಮ್ಮ ನಿವೇಶನದ ಮೇಲ್ಭಾಗದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ತಂತಿಯನ್ನು ಸ್ಥಳಾಂತರಿಸುವಂತೆ ಗ್ರಾಮ ಪಂಚಾಯಿತಿ ಹಾಗೂ ಜೆಸ್ಕಾಂ ಇಟಗಿ ವಿಭಾಗದ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 106ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
"ಈ ಘಟನೆ ಕುರಿತು ಪೊಲೀಸ್ ಇಲಾಖೆ ಹಾಗೂ ಇಂಧನ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ನಿಜಾಂಶ ತಿಳಿದ ಬಳಿಕ ಇಲಾಖೆಯ ನಿಯಮಾನುಸಾರ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಮಾಯಕ ವ್ಯಕ್ತಿಯ ಸಾವಿಗೆ ವಿಷಾದ ವ್ಯಕ್ತಪಡಿಸುತ್ತೇನೆ."
– ನಾಗರಾಜ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ಜೆಸ್ಕಾಂ, ಕುಕನೂರು






