Kuknoor | ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಆಗ್ರಹ

ಕುಕನೂರು : ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಿ, ಶಾಸಕ ಬಸವರಾಜ ರಾಯರೆಡ್ಡಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಸಮಾಜದ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಘಟಕ ಆಗ್ರಹಿಸಿದೆ.
ಪಟ್ಟಣದ ಆರೇರ್ ಸೊರಟೂರು ಆಯಿಲ್ ಮಿಲ್ ಸಭಾಂಗಣದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಈಶಪ್ಪ ಆರೇರ್ ಮತ್ತು ವೀರಣ್ಣ ಅಣ್ಣಿಗೇರಿ ಮಾತನಾಡಿ, ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.
ಸಮಾಜದ 11 ಮಂದಿ ಶಾಸಕರು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದು, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಾಜಕ್ಕೆ ಮೊದಲ ಆದ್ಯತೆ ನೀಡಬೇಕು. ಬಸವರಾಜ ರಾಯರೆಡ್ಡಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕನಿಷ್ಠ ನಾಲ್ವರು ಪಂಚಮಸಾಲಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜವನ್ನು ಕಡೆಗಣಿಸದೇ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಬೇಕು. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಮಾಜಕ್ಕೆ ದೊರೆತಿದ್ದ ಪ್ರಾತಿನಿಧ್ಯವನ್ನು ಮುಂದುವರಿಸುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ಪಂಚಮಸಾಲಿ ಸಮಾಜಕ್ಕೆ ಸಮರ್ಪಕ ಸ್ಥಾನಮಾನ ನೀಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಡಾ. ಈಶಪ್ಪ ಆರೇರ್, ಶರಣಗೌಡ ಪಾಟೀಲ್, ಗವಿಸಿದ್ದಪ್ಪ ಆರೇರ್, ಮಲ್ಲಣ್ಣ ಕೂಡ್ಲೂರು, ಸರಸ್ವತಿ ಕೂಡ್ಲೂರು, ಮಹೇಶ್ ಬನ್ನಿಕೊಪ್ಪ, ಚಂದ್ರು ಬಗನಾಳ, ಉಮಾ ಆರೇರ್, ಬಸವರಾಜ ವೀರಾಪುರ, ಬಸವರಾಜ ತೊಂಡಿಹಾಳ, ದೀಪಾ ಮಹೇಶಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.






