Kuknoor | ಬಿಜೆಪಿಗೆ ಅಭಿವೃದ್ಧಿಗಿಂತ ಧಾರ್ಮಿಕ ವಿಚಾರವೇ ಅಸ್ತ್ರ : ಗಗನ್ ನೋಟಗಾರ್

ಕುಕನೂರು: ತಾಲೂಕಿನ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಗಮನಹರಿಸದೆ, ಧಾರ್ಮಿಕ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ಗಗನ್ ನೋಟಗಾರ್ ಆರೋಪಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಲಹೆ ಮತ್ತು ಸಹಕಾರ ನೀಡುವ ಬದಲು ಬಿಜೆಪಿ ನಾಯಕರು ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದರು.
ಇತ್ತೀಚೆಗೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಸಚಿವ ಬಸವರಾಜ ರಾಯರಡ್ಡಿ ವ್ಯಕ್ತಪಡಿಸಿದ ಮಾತುಗಳನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಚಿವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಇಸ್ಲಾಂ ಧರ್ಮದ ಜೊತೆಗೆ ಇತರ ಧರ್ಮಗಳೂ ಶ್ರೇಷ್ಠ ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ತಾಲೂಕಿನ ಅಭಿವೃದ್ಧಿ ವಿಷಯ ಬಂದಾಗ ಮೌನವಾಗಿರುವ ಬಿಜೆಪಿ ನಾಯಕರು, ಧಾರ್ಮಿಕ ಮತ್ತು ಮತೀಯ ವಿಚಾರಗಳು ಬಂದಾಗ ಮಾತ್ರ ಸಕ್ರಿಯರಾಗುತ್ತಾರೆ. ಜನರ ನೈಜ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೆ ಧಾರ್ಮಿಕ ವಿಚಾರಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುವುದು ಸರಿಯಲ್ಲ ಎಂದು ಗಗನ್ ನೋಟಗಾರ್ ಹೇಳಿದರು.






