ಯಲಬುರ್ಗಾ–ಕುಕನೂರು ಅಭಿವೃದ್ಧಿಗೆ 970 ಕೋಟಿ ರೂ. ವೆಚ್ಚದ ಕೆರೆ ತುಂಬಿಸುವ ಯೋಜನೆಗೆ ಶೀಘ್ರ ಚಾಲನೆ: ಸಚಿವ ಬಸವರಾಜ ರಾಯರಡ್ಡಿ

ಕೊಪ್ಪಳ: ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಎರಡೂ ತಾಲ್ಲೂಕಿನ 34 ಕೆರೆಗಳನ್ನು ತುಂಬಿಸುವ 970 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕು ಪಂಚಾಯಿತಿಗಳ ವತಿಯಿಂದ ಗುನ್ನಾಳ ಗ್ರಾಮದಲ್ಲಿ ಆಯೋಜಿಸಿದ್ದ ಜನಸಂದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆರೆ ತುಂಬಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮುಂದಿನ 15 ರಿಂದ 20 ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮೊದಲ ಹಾಗೂ ಎರಡನೇ ಹಂತದ ಬಳಿಕ ಮೂರನೇ ಪಟ್ಟಿಯಲ್ಲಿ ಯಲಬುರ್ಗಾ ತಾಲ್ಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಲಾಗುವುದು. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದಿಂದ ಅಗತ್ಯ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗುನ್ನಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಮತ್ತು ಪೀಠೋಪಕರಣಗಳನ್ನು ಸಚಿವರು ಲೋಕಾರ್ಪಣೆ ಮಾಡಿದರು. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 100 ಹಾಸಿಗೆಗಳ ಬಾಲಕಿಯರ ವಸತಿ ನಿಲಯವನ್ನು ಮಂಜೂರು ಮಾಡುವುದಾಗಿ ಘೋಷಿಸಿದರು.
ಗುನ್ನಾಳ ಪಾಲಿಟೆಕ್ನಿಕ್ ಕಾಲೇಜನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಹಾಗೂ ವಿಶ್ವ ಬ್ಯಾಂಕ್ ಯೋಜನೆಯಡಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು. ಇದಕ್ಕಾಗಿ ಅಗತ್ಯ ಐದು ಎಕರೆ ಜಮೀನು ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಗುನ್ನಾಳ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದ ಕಲ್ಯಾಣ ಮಂಟಪ, 1 ಕೋಟಿ ರೂ. ವೆಚ್ಚದ ವಾಲ್ಮೀಕಿ ಭವನ ಸೇರಿದಂತೆ ವಿವಿಧ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ತಳಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 20 ರಿಂದ 25 ಕೋಟಿ ರೂ. ವೆಚ್ಚದ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆ ಕಾರ್ಯವೂ ನಡೆಯುತ್ತಿದೆ ಎಂದು ಸಚಿವರು ಹೇಳಿದರು.
ಸರ್ಕಾರದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಅನ್ನಭಾಗ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿವೆ. ಜನರ ಕೆಲಸಗಳನ್ನು ವಿಳಂಬ ಮಾಡದೆ ಅಧಿಕಾರಿಗಳು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವುದು ಆಡಳಿತದ ಪ್ರಮುಖ ಕರ್ತವ್ಯ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಾಟೀಲ್ ಮಾತನಾಡಿ, ಯಲಬುರ್ಗಾ ಕ್ಷೇತ್ರ ಶಿಕ್ಷಣ ಕ್ಷೇತ್ರದಲ್ಲಿ ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ಗುನ್ನಾಳ ಸರ್ಕಾರಿ ಪಿಯು ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ 77 ವಿದ್ಯಾರ್ಥಿಗಳು ದಾಖಲಾತಿ ಮಾಡಿಕೊಂಡಿದ್ದು, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೊಂದಿಗೆ ಸುಸಜ್ಜಿತ ಪ್ರಯೋಗಾಲಯ ಮತ್ತು ಅಗತ್ಯ ಬೋಧಕ ಹುದ್ದೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಜನಸಂದರ್ಶನ ಕಾರ್ಯಕ್ರಮದ ಅಂಗವಾಗಿ ಗುನ್ನಾಳ, ತಾಳಕೇರಿ, ಹಿರೇವಂಕಲಕುಂಟಾ ಹಾಗೂ ಬಳೂಟಗಿ ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು. ಸಾರ್ವಜನಿಕರು ಹಾಗೂ ರೈತರು ತಮ್ಮ ಗ್ರಾಮಗಳ ಕುಂದುಕೊರತೆಗಳನ್ನು ಸಚಿವರಿಗೆ ಸಲ್ಲಿಸಿದ್ದು, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಯಲಬುರ್ಗಾ ತಹಶೀಲ್ದಾರ್ ಪ್ರಕಾಶ ನಾಸಿ, ಯಲಬುರ್ಗಾ ಉಪವಿಭಾಗದ ಸಹಾಯಕ ಇಂಜಿನಿಯರ್ ಮಲ್ಲಿಕಾರ್ಜುನ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಹಲವು ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.






