ದಸರಾ ಉದ್ಘಾಟಕರನ್ನು ಹಿಂದೂಗಳಾಗಿ ಎನ್ನುವುದು ತರವಲ್ಲ: ಸಿದ್ದರಾಮಯ್ಯ

ಮೈಸೂರು: ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಬಾನು ಮುಷ್ತಾಕ್ ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಮ್ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು.
ಮುಸ್ಲಿಂ ಗುರುಗಳು ಬಾನು ಮುಷ್ತಾಕ್ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಕನ್ನಡದ ಮೇಲೆ ಅಭಿಮಾನ, ಪ್ರೀತಿ ಇಲ್ಲದೆ ಇದ್ದರೆ ಬರೆಯಲು ಸಾಧ್ಯವೇ?
ದಿವಾನ್ ಮಿರ್ಝಾ ಇಸ್ಮಾಯೀಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಆಗ ಆರೆಸ್ಸೆಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು? 2017ರಲ್ಲಿ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು. ಆಗ ಇವರೆಲ್ಲ ಎಲ್ಲಿ ಹೋಗಿದ್ದರು? ಬಾನು ಮುಷ್ತಾಕ್ ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ, ಪ್ರೀತಿ ಇಲ್ಲದೆ ಬರೆಯಲು ಸಾಧ್ಯವೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.







