ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದ ಆರೆಸ್ಸೆಸ್ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ

ಮೈಸೂರು, ಅ.18: ಸಂಘ ಪರಿವಾರ ಮತ್ತು ಆರೆಸ್ಸೆಸ್ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ತಿಳಿಸಿದರು.
ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂತಹ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಅನ್ನು ತಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು, ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಶೂ ಎಸೆತವನ್ನು ದಲಿತರಷ್ಟೇ ಅಲ್ಲ, ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.
ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರ ಪ್ರಾರಂಭವಾಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಶಿವಕುಮಾರ್, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಡಾ.ಬಿ.ಆರ್.ಅಂಬೇಡ್ಕರ್ ಎಜುಕೇಷನಲ್ ಆಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷೆ ಡಿ.ಭಾಗ್ಯಲಕ್ಷ್ಮೀ ಶ್ರೀನಿವಾಸಪ್ರಸಾದ್, ಕುಲಸಚಿವೆ ಎಂ.ಕೆ.ಸವಿತಾ, ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರಕುಮಾರ್, ಹಿರಿಯ ಪ್ರಾಧ್ಯಾಪಕ ಡಾ.ಜೆ.ಸೋಮಶೇಖರ್ ಮುಂತಾದವರಿದ್ದರು.







