ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿರುವ ತಮ್ಮ ನಿವಾಸದ ಬಳಿ ಸೋಮವಾರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಮೈಸೂರು: ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಪುನರುಚ್ಚರಿಸಿದರು.
ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿ, ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ?. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?
ಮಾಜಿ ಸಚಿವ ಕೆ.ಎನ್.ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಭೇಟಿ ಮಾಡಲಿ, ಡಿ.ಕೆ.ಶಿವಕುಮಾರ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಹೇಳುವುದು ಸರಿಯಲ್ಲ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸರಕಾರ ಮಾಡಿತ್ತು ಎಂದು ಸಿದ್ದರಾಮಯ್ಯ ಹೇಳಿದರು.
ಬಜೆಟ್ ಸಿದ್ಧತೆ ನಡೆದಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ತಯಾರಿ ನಡೆಸುವಾಗ ತಿಳಿಸುವುದಾಗಿ ಮುಖ್ಯಮಂತ್ರಿ ಹೇಳಿದರು.







