"ಪ್ರಯತ್ನ ವಿಫಲವಾದರೂ....": ಚರ್ಚೆಗೆ ಕಾರಣವಾದ ಡಿಸಿಎಂ ಡಿಕೆಶಿ ಪೋಸ್ಟ್

PC: x.com/DKShivakumar
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಮಾಡಿರುವ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಖಾಸಗಿ ಕಾರ್ಯನಿಮಿತ್ತ ತಮಿಳುನಾಡಿಗೆ ತೆರಳಲು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಕೆಲಕಾಲ ಮಾತುಕತೆ ನಡೆಸಿದ್ದರು.
ಚರ್ಚೆಗೆ ಗ್ರಾಸವಾದ ಡಿಕೆಶಿ ಪೋಸ್ಟ್ :
ಈ ಮಹತ್ವದ ಭೇಟಿಯ ಬೆನ್ನಲ್ಲೇ ಬುಧವಾರ ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ, "ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ" ಎಂದು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಮಂತ್ರಿಮಂಡಲ ಪುನರ್ ರಚನೆಯ ಕುರಿತಾದ ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ, ಡಿಕೆಶಿ ಅವರ ಈ ಮಾತುಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.







