ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೆ ಸರಕಾರ, ಕಾಂಗ್ರೆಸ್ ಪಕ್ಷ ಉಳಿಸೋದು ಕಷ್ಟ: ಎಚ್.ಸಿ.ಮಹದೇವಪ್ಪ

ಮೈಸೂರು : ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇಲ್ಲದೇ ಸರಕಾರ ಮತ್ತು ಕಾಂಗ್ರೆಸ್ ಪಕ್ಷವನ್ನು ಉಳಿಸೋದು ಕಷ್ಟ. ಪೂರ್ಣಾವಧಿಗೆ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮಂಗಳವಾರ ವಿಧಾನ ಪರಿಷತ್ ಸದಸ್ಯ ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2028ರಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಬೇಕು ಎಂದು ಸಭಿಕರ ಆಗ್ರಹಕ್ಕೆ ದನಿಗೂಡಿಸಿದ ಸಚಿವ ಮಹದೇವಪ್ಪ ಅವರು, 2028ರಲ್ಲೂ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾದರೂ ನಮ್ಮದೇನು ತಕರಾರು ಇಲ್ಲ ಎಂದರು.
ಸಿದ್ದರಾಮಯ್ಯ ಅವರ ಮೇಲೆ ದೊಡ್ಡ ಹೊಣೆಗಾರಿಕೆ ಇದೆ. ಅವರ ಮೇಲೆ ಜನರಿಗೆ ಬಲವಾದ ನಂಬಿಕೆ ಇದೆ. ಸಿದ್ದರಾಮಯ್ಯ ಇಲ್ಲದಿದ್ದರೆ ಅಹಿಂದ ಬಲಹೀನವಾಗುತ್ತದೆ. ಹಾಗಾಗಿ ಅಹಿಂದ ಸಮಾಜಗಳು ಎಚ್ಚರಿಕೆಯಿಂದ ಇರಬೇಕು. ಸಿದ್ದರಾಮಯ್ಯ ನಾಯಕತ್ವ ಗಟ್ಟಿಗೊಳಿಸಲು ಮುಂದಾಗಬೇಕು ಎಂದು ಎಂದು ಹೇಳಿದರು.
ದಲಿತರು ಬಹಳ ಬುದ್ಧಿವಂತರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಬದಲಿಸುವುದಾದರೆ ದಲಿತರಿಗೆ ಅವಕಾಶ ಕೊಡಬೇಕೆಂದು ಪರೋಕ್ಷವಾಗಿ ಕೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಬೇಕು. ಸಿದ್ದರಾಮಯ್ಯ ಎಂದೂ ಭ್ರಷ್ಟಾಚಾರಕ್ಕೆ ಮಣೆ ಹಾಕಿಲ್ಲ. ಕಳ್ಳರನ್ನು ಪ್ರೋತ್ಸಾಹಿಸಲಿಲ್ಲ. ಹಾಗಾಗಿ ಅವರ ನಾಯಕತ್ವ ಮತ್ತು ಮುಂದಾಳತ್ವ ಅಹಿಂದ ಸಮುದಾಯಗಳಿಗೆ ಅಗತ್ಯ ಎಂದು ತಿಳಿಸಿದರು.
ಬ್ಯಾಕ್ಲಾಗ್ ಹುದ್ದೆಗೆ ಕ್ರಮ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ಸಾವಿರ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಕ್ರಮವಹಿಸಿದ್ದೇವೆ. ಹುದ್ದೆಗಳ ಭರ್ತಿಗಾಗಿ 5 ತಂಡಗಳನ್ನು ರಚಿಸಿದ್ದು, ಸಭೆ ನಡೆಸಲಾಗಿದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದರು.







