Mysuru | ʼಉದ್ಯೋಗ ಮೇಳʼಕ್ಕೆ ಚಾಲನೆ ನೀಡಿ ಯುವಜನತೆಗೆ ಶುಭ ಹಾರೈಸಿದ ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಯುವಜನರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವುದು ಮತ್ತು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು ಪ್ರಸ್ತುತ ದಿನಮಾನಗಳಲ್ಲಿ ಅತ್ಯಂತ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆ ಕೇವಲ ಉದ್ಯೋಗ ಹುಡುಕುವವರಾಗದೆ, ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಜನಸ್ಪಂದನ ಟ್ರಸ್ಟ್ (ರಿ.) ವತಿಯಿಂದ ಇಂದು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 8000 ಕ್ಕೂ ಹೆಚ್ಚು ಉದ್ಯೋಗವಕಾಶಗಳ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಚಿವರು, ಸ್ಥಳೀಯವಾಗಿಯೇ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಇಂತಹ ಬೃಹತ್ ಮೇಳಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಮತ್ತು ಯುವಜನತೆಯ ಉಜ್ವಲ ಭವಿಷ್ಯಕ್ಕೆ ದೊಡ್ಡ ಮಟ್ಟದ ಪೂರಕ ವಾತಾವರಣ ನಿರ್ಮಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಹಾಗೂ ಹೆಚ್.ಎ. ವೆಂಕಟೇಶ್ ಉಪಸ್ಥಿತರಿದ್ದರು.
ಅಲ್ಲದೆ ಮಾಜಿ ಮಹಾಪೌರರಾದ ನಾರಾಯಣ್, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಸಿದ್ದರಾಜು, ನಗರಪಾಲಿಕೆ ಮಾಜಿ ಸದಸ್ಯರಾದ ಜೆ. ಗೋಪಿ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿದ್ದರು.






