ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಎಸ್ಸಿ ಕುಟುಂಬಗಳಿಗೆ ಸಮೀಕ್ಷೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಿ : ಒಳಮೀಸಲಾತಿ ಆಯೋಗಕ್ಕೆ ಪತ್ರಕರ್ತ ಕೆ.ಶಿವಕುಮಾರ್ ಮನವಿ

ನ್ಯಾ.ಎಚ್.ಎನ್.ನಾಗಮೋಹನ್ ದಾಸ್
ಮೈಸೂರು : ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಕುಟುಂಬವು ಮುಕ್ತವಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡುವಂತೆ ಕೋರಿ ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮನವಿ ಪತ್ರ ಸಲ್ಲಿಸಿದ್ದಾರೆ.
ಈ ಸಂಬಂಧ ಸೋಮವಾರ ಬೆಂಗಳೂರಿಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಏಕಸದಸ್ಯ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ದತ್ತಾಂಶಗಳ ಸಂಗ್ರಹಣೆಯ ಸಮೀಕ್ಷೆಯ ಮೊದಲನೇ ಹಂತದಲ್ಲಿ ಗಣತಿದಾರರು ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಎರಡನೇ ಹಂತದಲ್ಲಿ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಹಾಗೂ ಮೂರನೇ ಹಂತವಾಗಿ ಮೊಬೈಲ್ ಆ್ಯಪ್ನಲ್ಲಿ ಸ್ವಯಂ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯು ನಡೆಯಲಿದೆ ಎಂಬ ಮಾಹಿತಿಯನ್ನು ಆಯೋಗವು ಒದಗಿಸಿದೆ. ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದ ಪರಿಶಿಷ್ಟ ಜಾತಿಯ ಅನೇಕ ಕುಟುಂಬಗಳು ಪಟ್ಟಣ ಹಾಗೂ ನಗರ ಪ್ರದೇಶಗಳಿಗೆ ಔದ್ಯೋಗಿಕ ಹಾಗೂ ಮಕ್ಕಳ ವಿದ್ಯಾಭ್ಯಾಸದ ಕಾರಣಕ್ಕಾಗಿ ವಲಸೆ ಬಂದಿರುತ್ತಾರೆ. ಇವರು ನಗರ ಪ್ರದೇಶಗಲ್ಲಿ ತಮ್ಮ ವಾಸಕ್ಕಾಗಿ ಬಾಡಿಗೆ ಅಥವಾ ಭೋಗ್ಯಕ್ಕೆ ಮನೆಯನ್ನು ಪಡೆಯುವ ಸಂದರ್ಭದಲ್ಲಿ ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆಗೆ ಭೀತಿಗೊಂಡು ತಮ್ಮ ನಿಜವಾದ ಜಾತಿಯನ್ನು ಮರೆಮಾಚಿ ಮನೆ ಬಾಡಿಗೆ ಪಡೆಯುವಂಥ ಶೋಚನೀಯ ಸ್ಥಿತಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ ನಡೆಯುತ್ತಿರುವ ಮನೆ-ಮನೆಗೆ ಭೇಟಿಯ ದತ್ತಾಂಶ ಶೇಖರಣೆ ಸಮೀಕ್ಷೆಯಲ್ಲಿ ಇವರು ಯಾವುದೇ ಕಾರಣಕ್ಕೂ ತಮ್ಮ ನಿಜವಾದ ಜಾತಿ ಹಾಗೂ ಉಪಜಾತಿಗಳನ್ನು ಬಹಿರಂಗಪಡಿಸುವುದಿಲ್ಲ. ತಮ್ಮ ಜಾತಿ ತಿಳಿಸಿದರೆ ನೆರೆಹೊರೆಯವರಿಂದಲೇ ಸಾಮಾಜಿಕ ಅಸಮಾನತೆಗೆ ಒಳಗಾಗುವ ಆತಂಕದಿಂದ ಇವರುಗಳು ಸಮೀಕ್ಷೆಯ ಸಂದರ್ಭದಲ್ಲಿ ತಮ್ಮ ನಿಜವಾದ ಜಾತಿಯನ್ನು ತಿಳಿಸದೆ ಸಮೀಕ್ಷೆಯಿಂದ ಹೊರಗುಳಿಯುವ ಸಂಭವ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ಮೊಬೈಲ್ ಆಪ್ ಮೂಲಕ ಆನ್ಲೈನ್ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಲ್ಲಿ ಅಗತ್ಯ ಜ್ಞಾನದ ಕೊರತೆಯೂ ಇರುತ್ತದೆ. ನಗರ ಪ್ರದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ ಕುಟುಂಬಗಳ ಅನುಕೂಲಕ್ಕಾಗಿ ತಾಲ್ಲೂಕು ಕಚೇರಿ, ನಗರ ಪಾಲಿಕೆ ಕಚೇರಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಒಂದು ವಾರಗಳ ಕಾಲ ವಿಶೇಷ ಘಟಕಗಳನ್ನು ತೆರೆದು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.