Ayodhya Ram Mandir | ಚಂಪತ್ ರಾಯ್ ರಾಜೀನಾಮೆ ಕುರಿತು ಮಾಹಿತಿ ಇಲ್ಲ: VHP

Photo | PTI
ಹೊಸದಿಲ್ಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಜೀನಾಮೆ ನೀಡಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು VHP ತಿಳಿಸಿದೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆಗಳ ದುರುಪಯೋಗದ ಆರೋಪಗಳ ನಡುವೆ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು "ನೈತಿಕ ಹೊಣೆಗಾರಿಕೆ" ಆಧಾರದ ಮೇಲೆ ತಮ್ಮ ಹುದ್ದೆಗಳಿಂದ ಕೆಳಗಿಳಿದಿದ್ದಾರೆ ಎಂದು ವರದಿಯಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ವಿಎಚ್ಪಿಯ ಹಿರಿಯ ಪದಾಧಿಕಾರಿಯೊಬ್ಬರು, "ಚಂಪತ್ ರಾಯ್ ಜೀ ಅವರು ಟ್ರಸ್ಟ್ನ ಹುದ್ದೆಗೆ ರಾಜೀನಾಮೆ ನೀಡಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ" ಎಂದು ಹೇಳಿದ್ದಾರೆ. ಈ ವಿಷಯದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.
ಕಳೆದ ವಾರ ದೇಣಿಗೆ ದುರುಪಯೋಗದ ಆರೋಪಗಳ ಕುರಿತು ವಿಎಚ್ಪಿ, ಚಂಪತ್ ರಾಯ್ ಅವರನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿತ್ತು. ಅಲ್ಲದೆ, ರಾಮ ಮಂದಿರದ ಹೆಸರಿನಲ್ಲಿ ಹಣ ಸಂಗ್ರಹಿಸಿರುವ ಎಲ್ಲ ಟ್ರಸ್ಟ್ಗಳ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿತ್ತು.
ಚಂಪತ್ ರಾಯ್ ಅವರೊಂದಿಗೆ ದೀರ್ಘಕಾಲದ ನಂಟು ಹೊಂದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕೂಡ ರಾಜೀನಾಮೆ ಕುರಿತ ವರದಿಗಳ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.
ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ದಾನ ಮಾಡಿದ ನಗದು ಹಾಗೂ ಬೆಲೆಬಾಳುವ ವಸ್ತುಗಳ ದುರುಪಯೋಗದ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಪ್ರಕರಣದ ತನಿಖೆ ನಡೆಸುತ್ತಿದೆ.
ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಚಂಪತ್ ರಾಯ್, 2020ರಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆಯಾದಾಗಿನಿಂದ ಅದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಇದ್ದಾರೆ.
ಆದರೂ, ಚಂಪತ್ ರಾಯ್ ಅವರ ರಾಜೀನಾಮೆ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನಿಂದ ಇದುವರೆಗೆ ಯಾವುದೇ ಅಧಿಕೃತ ದೃಢೀಕರಣ ಹೊರಬಂದಿಲ್ಲ.






