ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ : ಎಸ್ಐಟಿ ತನಿಖೆಯನ್ನು 15 ದಿನ ವಿಸ್ತರಿಸಿದ ಸಿಎಂ ಆದಿತ್ಯನಾಥ್

ಸಿಎಂ ಆದಿತ್ಯನಾಥ್ | Photo Credit : PTI
ಲಕ್ನೋ, ಜು. 1: ಅಯೋಧ್ಯೆಯ ಶ್ರೀ ರಾಮ ಜನ್ಮ ಭೂಮಿ ದೇಗುಲದ ದೇಣಿಗೆ ಡಬ್ಬಿಯಿಂದ 7 ಕೋ.ರೂ. ಕಾಣಿಕೆ ಕಳವಾಗಿರುವ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ)ತನ್ನ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯಂತೆ ಎಸ್ಐಟಿ ತನಿಖೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ರಾಜ್ಯ ಸರಕಾರದ ವಕ್ತಾರರು ತಿಳಿಸಿದ್ದಾರೆ.
ಕಳೆದ ಜೂನ್ನಲ್ಲಿ ಮಂದಿರದ ಕಾಣಿಕೆ ಡಬ್ಬಿಯಿಂದ ದೇಣಿಗೆ ಕಳುವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದಾಗ ಈ ಕೃತ್ಯ ಮುನ್ನೆಲೆಗೆ ಬಂದಿತ್ತು. ಅನಂತರ ಜೂನ್ 13ರಂದು ಶ್ರೀ ರಾಮ ಜನ್ಮ ಭೂಮಿ ತೀರ್ಥ ಟ್ರಸ್ಟ್ ಈ ಪ್ರಕರಣದ ಕುರಿತು ಎಸ್ಐಟಿ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿಯವರನ್ನು ವಿನಂತಿಸಿತ್ತು ಎಂದು ಅವರು ತಿಳಿಸಿದ್ದಾರೆ.
ಸರಕಾರ ತತ್ಕ್ಷಣವೇ ಲಕ್ನೋ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್, ಐಜಿ ಕಿರಣ್ ಎಸ್. ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಅವರನ್ನು ಒಳಗೊಂಡ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.




