Bihar | ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ನಾಲ್ವರು ರೋಗಿಗಳು ಮೃತ್ಯು; 20 ಜನರ ರಕ್ಷಣೆ

Photo | indiatoday
ಪಾಟ್ನಾ: ದಿಲ್ಲಿಯ ಮಾಳವಿಯಾ ನಗರದ ಹೊಟೇಲ್ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೆ ಬಿಹಾರದ ಮುಝಾಫರ್ ಪುರದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದು, ಸುಮಾರು 20 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಶಶಾಂಕ್ ಕುಮಾರ್, ಉದಯ್ ಕುಮಾರ್, ಗೀತಾ ದೇವಿ ಮತ್ತು ಬೃಜ್ ನಂದ್ ರಾಯ್ ಎಂದು ಗುರುತಿಸಲಾಗಿದೆ.
ಬೆಂಕಿ ಆಕಸ್ಮಿಕ ಸಂಭವಿಸುತ್ತಿದ್ದಂತೆ ದಟ್ಟ ಹೊಗೆ ಕಟ್ಟಡದ ಬಹುತೇಕ ಭಾಗಗಳಿಗೆ ಹರಡಿದೆ. ಇದರಿಂದ ಆಸ್ಪತ್ರೆಯ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ತುರ್ತು ಸ್ಪಂದನೆ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರೋಗಿಗಳನ್ನು ಸುರಕ್ಷಿತವಾಗಿ ತೆರವುಗೊಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸಕ್ಯೂಟ್ ನಿಂದ ಈ ಬೆಂಕಿ ಆಕಸ್ಮಿಕ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಈ ಬೆಂಕಿ ಅವಘಡದಲ್ಲಿ 20ಕ್ಕೂ ಹೆಚ್ಚು ರೋಗಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯ ಕಟ್ಟಡದಿಂದ ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್, “ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.






