Kolkata | ಮುಖ್ಯ ಚುನಾವಣಾ ಆಯುಕ್ತರಿಗೆ ಕಪ್ಪು ಬಾವುಟ ಪ್ರದರ್ಶನ, 'ಗೋ ಬ್ಯಾಕ್' ಘೋಷಣೆ

Photo credit: PTI
ಕೋಲ್ಕತ್ತಾ : ಸೋಮವಾರ ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಭಟನೆಯನ್ನು ಎದುರಿಸಿದರು. ಜ್ಞಾನೇಶ್ ಕುಮಾರ್ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ರವಿವಾರ ರಾತ್ರಿ ಜ್ಞಾನೇಶ್ ಕುಮಾರ್ ಕೋಲ್ಕತ್ತಾ ನಗರಕ್ಕೆ ಆಗಮಿಸಿದಾಗಲೂ ಪ್ರತಿಭಟನೆಗಳು ನಡೆದಿದ್ದವು. ಅವರು ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಿದ್ದಂತೆ, ಟಿಎಂಸಿ ಕಾರ್ಯಕರ್ತರು 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದರು.
ಕೈಖಾಲಿ ಪ್ರದೇಶದ ಮೂಲಕ ತೆರಳುತ್ತಿದ್ದಾಗ ಜ್ಞಾನೇಶ್ ಕುಮಾರ್ ಅವರಿಗೆ ಮತ್ತೆ ಕಪ್ಪು ಬಾವುಟ ಪ್ರದರ್ಶಿಸಲಾಗಿದೆ. ಇದಲ್ಲದೆ ಎಡಪಕ್ಷಗಳ ಕಾರ್ಯಕರ್ತರು ವಿಮಾನ ನಿಲ್ದಾಣದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ತ್ವರಿತವಾಗಿ ನಿಯಂತ್ರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.





