ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ವಿಜಯ್

Photo | PTI
ಹೊಸದಿಲ್ಲಿ : ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರಕಾರಕ್ಕೆ ತಮಿಳುನಾಡು ಸಿಎಂ ವಿಜಯ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯವನ್ನು ಮಂಡಿಸಿದ್ದಾರೆ.
ಮೇಕೆದಾಟು ಬಳಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಕ್ರಮದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ನಿರ್ಣಯದಲ್ಲಿ, ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ತಾಂತ್ರಿಕ ಹಾಗೂ ಪರಿಸರ ಅನುಮೋದನೆ ನೀಡಬಾರದು ಎಂದು ಒತ್ತಾಯಿಸಲಾಗಿದೆ.
ಕರ್ನಾಟಕ ಸರಕಾರ ಈ ಯೋಜನೆಯನ್ನು "ಏಕಪಕ್ಷೀಯವಾಗಿ" ಜಾರಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದ್ದು, ಯೋಜನೆಗೆ ಸಂಬಂಧಿಸಿ ಇತರ ರಾಜ್ಯಗಳ ಒಪ್ಪಿಗೆಯನ್ನು ಪಡೆಯುವುದು ಅಗತ್ಯ ಎಂದು ಹೇಳಲಾಗಿದೆ.
ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯ ನಿರ್ಮಿಸಲು ಕರ್ನಾಟಕ ಮುಂದಾಗಿರುವುದಕ್ಕೆ ತಮಿಳುನಾಡು ದೀರ್ಘಕಾಲದಿಂದ ವಿರೋಧ ವ್ಯಕ್ತಪಡಿಸುತ್ತಿದೆ. ಈ ಯೋಜನೆ ಜಾರಿಯಾದರೆ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆ ಉಂಟಾಗುತ್ತದೆ ಎಂಬುದು ತಮಿಳುನಾಡಿನ ವಾದವಾಗಿದೆ.






