'ಲಕ್ಷ್ಮಣ ರೇಖೆ ದಾಟಿದೆ': ಮೋದಿಯನ್ನು ಹೊಗಳಿದ ಶಶಿ ತರೂರ್ಗೆ ಕಾಂಗ್ರೆಸ್ ತರಾಟೆ

Photo | PTI
ಹೊಸದಿಲ್ಲಿ: ಭಾರತ-ಪಾಕಿಸ್ತಾನದ ಸಂಘರ್ಷದ ಕುರಿತು ಪದೇ ಪದೇ ಹೇಳಿಕೆ ನೀಡುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ʼಲಕ್ಷ್ಮಣ ರೇಖೆಯನ್ನು ದಾಟಿದ್ದಾರೆʼ ಎಂದು ಪಕ್ಷದ ಮೂಲಗಳು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಡೊನಾಲ್ಡ್ ಟ್ರಂಪ್ ಹೇಳಿಕೆ, ಕದನ ವಿರಾಮ ಘೋಷಣೆ ಮತ್ತು ಆ ನಂತರದ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕರೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅದು ಅವರ ವೈಯಕ್ತಿಕ ಅಭಿಪ್ರಾಯ, ತರೂರ್ ಅವರ ಹೇಳಿಕೆಗಳು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಶಿ ತರೂರ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಸಚಿನ್ ಪೈಲಟ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು.
"ನಮ್ಮದು ಪ್ರಜಾಪ್ರಭುತ್ವ ಪಕ್ಷ ಮತ್ತು ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ, ಆದರೆ ಈ ಬಾರಿ ತರೂರ್ ಲಕ್ಷ್ಮಣ ರೇಖೆಯನ್ನು ದಾಟಿದ್ದಾರೆ" ಎಂದು ಪಕ್ಷದ ಮೂಲಗಳು ಸುದ್ದಿ ಸಂಸ್ಥೆಗೆ ತಿಳಿಸಿವೆ.
ಚರ್ಚೆಯ ಸಮಯದಲ್ಲಿ ನಾಯಕತ್ವವು ಈ ಬಗ್ಗೆ ಸ್ಪಷ್ಟ ಸಂದೇಶವನ್ನು ನೀಡಿದೆ. ಇದು ವೈಯಕ್ತಿಕ ದೃಷ್ಟಿಕೋನಗಳನ್ನು ನೀಡುವ ಸಮಯವಲ್ಲ, ಬದಲಾಗಿ ಒಗ್ಗಟ್ಟನ್ನು ಪ್ರಸ್ತುತಪಡಿಸುವ ಮತ್ತು ಪಕ್ಷದ ಅಧಿಕೃತ ನಿಲುವನ್ನು ಪ್ರತಿಬಿಂಬಿಸುವ ಸಮಯ ಎಂದು ಪಕ್ಷದ ನಾಯಕತ್ವ ತಾಕೀತು ಮಾಡಿದೆ.
ಭಾರತ-ಪಾಕ್ ಉದ್ವಿಗ್ನತೆಯ ಬಳಿಕ ಶಶಿ ತರೂರ್ ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪಕ್ಷವೂ ಅಂತರ ಕಾಪಾಡಿಕೊಂಡು ಬಂದಿದೆ.







