ಸಂಸತ್ತಿನ ಮುಂಗಾರು ಅಧಿವೇಶನ | NEET ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡಿಸಿ ಸದನದಲ್ಲಿ ವಿಪಕ್ಷಗಳಿಂದ ಪ್ರತಿಭಟನೆ

Photo Credit : PTI
ಹೊಸದಿಲ್ಲಿ,ಜು.21: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಸೋಮವಾರ ದಿಲ್ಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರ ಮತ್ತು ಅಯೋಧ್ಯೆ ರಾಮಮಂದಿರದ ದೇಣಿಗೆ ಕಳವು ಆರೋಪಗಳು ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪಗಳನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಸಿಜೆಪಿ ಪ್ರತಿಭಟನೆ ಮತ್ತು ರಾಮಮಂದಿರ ದೇಣಿಗೆ ಹಣ ದುರುಪಯೋಗದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯಿಂದಾಗಿ ಲೋಕಸಭೆಯ ಕಲಾಪಗಳು ಸತತ ಎರಡನೇ ದಿನವಾದ ಮಂಗಳವಾರವೂ ವ್ಯತ್ಯಯಗೊಂಡವು.
ಎರಡು ಬಾರಿ ಮುಂದೂಡಿಕೆಯಾದ ನಂತರ ಸದನದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಪೂರ್ವಾಹ್ನ 11 ಗಂಟೆಗೆ ಸದನವು ಮೊದಲ ಪ್ರಶ್ನೆಯನ್ನು ಕೈಗೆತ್ತಿಕೊಂಡಾಗ, ವಿಪಕ್ಷ ಸದಸ್ಯರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಸ್ಪೀಕರ್ ಓಂ ಬಿರ್ಲಾ ಅವರು ನಿಯಮಾವಳಿಗಳ ಪ್ರಕಾರ ತಮ್ಮ ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವುದಾಗಿ ಸದಸ್ಯರಿಗೆ ಭರವಸೆ ನೀಡಿದರು. ಆದರೂ ಪ್ರತಿಭಟನಾನಿರತ ಸದಸ್ಯರು ಪಟ್ಟು ಬಿಡದಿದ್ದಾಗ ಬಿರ್ಲಾ ಕಲಾಪವನ್ನು ಮುಂದೂಡಿದರು. ನಂತರ ಮಧ್ಯಾಹ್ನ 12 ಗಂಟೆಗೆ ಸದನವು ಪುನಃ ಸಮಾವೇಶಗೊಂಡಾಗ ವಿರೋಧ ಪಕ್ಷದ ಸದಸ್ಯರು ಮತ್ತೆ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.
ಈ ಗದ್ದಲದ ನಡುವೆಯೂ ಸಚಿವರು ಸಂಸದೀಯ ದಾಖಲೆಗಳನ್ನು ಸದನದ ಮುಂದಿಟ್ಟರು.
ತಮ್ಮ ಆಸನಗಳಿಗೆ ಮರಳುವಂತೆ ಪೀಠದ ಮನವಿಗಳನ್ನು ವಿರೋಧ ಪಕ್ಷದ ಸದಸ್ಯರು ಕಡೆಗಣಿಸಿದ್ದರಿಂದ ಸದನವನ್ನು ಅಪರಾಹ್ನ ಎರಡು ಗಂಟೆಯವರೆಗೆ ಮುಂದೂಡಲಾಯಿತು. ಸದನವು ಮತ್ತೆ ಸೇರಿದಾಗಲೂ ವಿಪಕ್ಷಗಳ ಪ್ರತಿಭಟನೆ ಮತ್ತು ಘೋಷಣೆಗಳು ಮುಂದುವರಿದವು.
ಪೀಠದಲ್ಲಿದ್ದ ದಿಲೀಪ್ ಸೈಕಿಯಾ ಅವರು ತಮ್ಮ ಆಸನಗಳಿಗೆ ತೆರಳಿ ಕಲಾಪದಲ್ಲಿ ಭಾಗವಹಿಸುವಂತೆ ವಿರೋಧ ಪಕ್ಷದ ಸದಸ್ಯರಿಗೆ ಮಾಡಿಕೊಂಡ ಮನವಿ ವಿಫಲಗೊಂಡ ಬಳಿಕ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಅತ್ತ ರಾಜ್ಯಸಭೆಯಲ್ಲಿಯೂ ಹಲವಾರು ಬಾರಿ ಸದನವನ್ನು ಮುಂದೂಡಲಾಗಿದ್ದು, ಭೋಜನ ವಿರಾಮದ ಬಳಿಕ ಕಲಾಪ ಆರಂಭಗೊಂಡಾಗ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆ ಉಪಸಭಾಪತಿ ಹರಿವಂಶ ಅವರು ಸದನವನ್ನು ದಿನದ ಮಟ್ಟಿಗೆ ಮುಂದೂಡಿದರು.
ಬೆಳಿಗ್ಗೆ ಸದನವು ಆರಂಭಗೊಂಡಾಗ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಠಿ ಪ್ರಹಾರ ನಡೆಸಿದ್ದಾರೆ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದರು. ಅವರ ಈ ಹೇಳಿಕೆಯು ಆಡಳಿತ ಪಕ್ಷದ ಸದಸ್ಯರಿಂದ ಆಕ್ಷೇಪ ಮತ್ತು ಘೋಷಣೆಗಳಿಗೆ ಕಾರಣವಾಯಿತು. ಇದಕ್ಕೆ ಪ್ರತಿಯಾಗಿ ವಿರೋಧ ಪಕ್ಷದವರೂ ಘೋಷಣೆಗಳನ್ನು ಕೂಗಿದರು.
ಗದ್ದಲದ ನಡುವೆ ಸಭಾಪತಿ ಸಿ.ಪಿ ರಾಧಾಕೃಷ್ಣನ್ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.






