ಪವನ್ ಖೇರಾ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Photo| PTI
ಹೊಸದಿಲ್ಲಿ,ಎ.30: ತಮ್ಮ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತು ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಬಹು ಪಾಸ್ಪೋರ್ಟ್ ಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದ ಹಿನ್ನೆಲೆಯಲ್ಲಿ ಪವನ್ ಖೇರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಪವನ್ ಖೇರಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಅತುಲ್ ಚಂದೂರ್ಕರ್ ಅವರ ಪೀಠವು ಅರ್ಜಿಯ ವಿಚಾರಣೆಯನ್ನು ನಡೆಸಿತು.
ಪವನ್ ಖೇರಾ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣವನ್ನು ಅಪರೂಪದ ಪ್ರಕರಣ ಎಂದು ವಿವರಿಸಿದರು. “ಪ್ರಾಸಿಕ್ಯೂಷನ್ ನ ಮೇಲಾಧಿಕಾರಾಗಳಿಂದಲೇ ಹೇಳಿಕೆಗಳು ಬಂದಿವೆ” ಎಂದು ಮುಖ್ಯಮಂತ್ರಿ ಶರ್ಮಾ ಮಾಡಿದ ಕೆಲವು ಸಾರ್ವಜನಿಕ ಹೇಳಿಕೆಗಳನ್ನು ಉಲ್ಲೇಖಿಸಿದರು.
ಶರ್ಮಾ ಅವರ ಕೆಲವು ಹೇಳಿಕೆಗಳಲ್ಲಿ ಮುದ್ರಿಸಲಾಗದ ಪದಗಳು ಇರುವುದರಿಂದ, ಅವನ್ನು ಮುಕ್ತ ನ್ಯಾಯಾಲಯದಲ್ಲಿ ಓದಲು ಸಾಧ್ಯವಿಲ್ಲ ಎಂದು ಸಿಂಘ್ವಿ ಹೇಳಿದರು.
ಖೇರಾ ತಮ್ಮ ಉಳಿದ ಜೀವನವನ್ನು ಅಸ್ಸಾಂ ಜೈಲಿನಲ್ಲಿ ಕಳೆಯಬೇಕಾಗುತ್ತದೆ ಎಂದು ಶರ್ಮಾ ಬೆದರಿಕೆ ಹಾಕಿದ್ದಾರೆ ಎಂದು ಅವರು ವಾದಿಸಿದರು.
“ಡಾ.ಅಂಬೇಡ್ಕರ್ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು ‘ಸಾಂವಿಧಾನಿಕ ಹುದ್ದೆಯಲ್ಲಿರುವವರು ಕೌಬಾಯ್ ಅಥವಾ ರಾಂಬೊ ರೀತಿಯಲ್ಲಿ(ಆಕ್ರಮಣಕಾರಿ ಶೈಲಿ) ಮಾತನಾಡುವುದು ಸರಿಯಲ್ಲ ಎಂದು ಸಿಂಘ್ವಿ ಹೇಳಿದರು.
ಈ ಕುರಿತು ವಿಚಾರಣೆ ಪೂರ್ಣಗೊಂಡ ಬಳಿಕ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.






