ಉಪವಾಸ ಮುಷ್ಕರ ಕೈಬಿಡಲು ವಾಂಗ್ಚುಕ್ ಗೆ ಶಶಿ ತರೂರ್ ಮನವಿ

Photo credit: PTI
ಹೊಸದಿಲ್ಲಿ, ಜು. 15: ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಜಂತರ್ ಮಂತರ್ನಲ್ಲಿ ಉಪವಾಸ ಮುಷ್ಕರ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಮುಷ್ಕರವನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಬುಧವಾರ ಒತ್ತಾಯಿಸಿದ್ದಾರೆ.
ಅಲ್ಲದೆ, ಪ್ರತಿಭಟನಕಾರರೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿರುವ ಅವರು, ಇಂತಹ ಕ್ರಮವು ಸರ್ಕಾರದ ದೌರ್ಬಲ್ಯವನ್ನಲ್ಲ, ಮುತ್ಸದ್ಧಿತವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.
ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಕಾರರಿಗೆ ಬರೆದಿರುವ ಬಹಿರಂಗ ಪತ್ರದಲ್ಲಿ ತರೂರ್, ಸೋಮವಾರದಿಂದ ಸಂಸತ್ ಅಧಿವೇಶನ ಮತ್ತೆ ಆರಂಭವಾಗುತ್ತಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ವೇದಿಕೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪ್ರಸ್ತಾವಿಸಲು ಅವಕಾಶ ಸಿಗಲಿದೆ ಎಂದಿದ್ದಾರೆ.
ಸಮಸ್ಯೆಯನ್ನು ಅಲ್ಲಿಯೇ ಪರಿಹರಿಸಬೇಕೇ ಹೊರತು, ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಲ್ಲ. ದಯವಿಟ್ಟು ನನ್ನ ಮನವಿಗೆ ಕಿವಿಗೊಡಿ ಎಂದು ಶಶಿ ತರೂರ್ ಹೇಳಿದ್ದಾರೆ.




