ಜಾಮೀನು ನಿರಾಕರಣೆ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ಸುಪ್ರೀಂ ಕೋರ್ಟ್ , ಉಮರ್ ಖಾಲಿದ್ | Photo Credit : PTI
ಹೊಸದಿಲ್ಲಿ: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸಲು ಉಮರ್ ಖಾಲಿದ್ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಪರ ವಕೀಲರು ಸೋಮವಾರ ತಿಳಿಸಿದ್ದಾರೆ.
ಜನವರಿ 5ರಂದು ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿತ್ತು. ಆ ಆದೇಶವನ್ನು ಪರಿಶೀಲಿಸುವಂತೆ ಕೋರಿ ಈ ಅರ್ಜಿ ಸಲ್ಲಿಸಲಾಗಿದೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಪೀಠದ ಮುಂದೆ ಅರ್ಜಿಯನ್ನು ಉಲ್ಲೇಖಿಸಿ, ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು.
ಜನವರಿಯ ತೀರ್ಪಿನಲ್ಲಿ, ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠವು, ಈಶಾನ್ಯ ದಿಲ್ಲಿ ಗಲಭೆಯ ಪಿತೂರಿಯಲ್ಲಿ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿತ್ತು.
ಪ್ರತಿ ಆರೋಪಿಯ ಮೇಲಿನ ಆರೋಪಗಳು ಭಿನ್ನವಾಗಿರುವುದರಿಂದ ಜಾಮೀನು ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿತ್ತು. ದಾಖಲೆಗಳ ಪ್ರಕಾರ ಖಾಲಿದ್ ಮತ್ತು ಇಮಾಮ್ ಅವರ ಪಾತ್ರ ಇತರ ಆರೋಪಿಗಳಿಗಿಂತ ವಿಭಿನ್ನವಾಗಿದೆ ಎಂದು ಕೂಡ ತಿಳಿಸಿತ್ತು.
ಇದೇ ವೇಳೆ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಅವರ ವಿರುದ್ಧದ ಸಾಕ್ಷಿ ಮತ್ತು ಪ್ರಕರಣದ ಹಂತವನ್ನು ಗಮನಿಸಿ, ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಜಾಮೀನು ನೀಡಬಹುದು ಎಂದು ನ್ಯಾಯಾಲಯ ಹೇಳಿತ್ತು.






