West Bengal | ಅಭಿಷೇಕ್ ಬ್ಯಾನರ್ಜಿ ಬಳಿಕ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ; ತಲೆಗೆ ಗಾಯ

Photo | NDTV
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆ ಎದುರು ರವಿವಾರ ನಡೆದ ಘರ್ಷಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಗಾಯಗೊಂಡಿದ್ದಾರೆ.
ಬಂಧಿತ ಟಿಎಂಸಿ ಮುಖಂಡರು ಮತ್ತು ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪಕ್ಷದ ಬೆಂಬಲಿಗರು ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲು ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಬಿಜೆಪಿ ಕಾರ್ಯಕರ್ತರು ಟಿಎಂಸಿ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಪ್ರತಿಭಟನಾಕಾರರನ್ನು ‘ಕಳ್ಳರು’ ಎಂದು ಟೀಕಿಸಿದ್ದಾರೆ ಎನ್ನಲಾಗಿದೆ. ಇದರಿಂದ ಎರಡೂ ಪಕ್ಷಗಳ ಬೆಂಬಲಿಗರ ನಡುವೆ ವಾಗ್ವಾದ ಉಂಟಾಗಿ, ಬಳಿಕ ಘರ್ಷಣೆಗೆ ತಿರುಗಿದೆ.
ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಕೇಂದ್ರ ಭದ್ರತಾ ಪಡೆಗಳ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಹಿಂಸಾಚಾರ ಮತ್ತಷ್ಟು ವ್ಯಾಪಿಸದಂತೆ ಹೆಚ್ಚುವರಿ ಭದ್ರತೆಯನ್ನೂ ನಿಯೋಜಿಸಲಾಯಿತು.
ಘರ್ಷಣೆಯ ವೇಳೆ ಕಲ್ಯಾಣ್ ಬ್ಯಾನರ್ಜಿ ಅವರ ತಲೆಗೆ ಗಾಯವಾಗಿದೆ.
ಘಟನೆಯನ್ನು ಖಂಡಿಸಿರುವ ಬ್ಯಾನರ್ಜಿ, ಪೊಲೀಸ್ ಠಾಣೆಗೆ ಅಧಿಕೃತ ಮನವಿ ಸಲ್ಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ತಮ್ಮನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
‘ಪ್ರಜಾಸತ್ತಾತ್ಮಕ ಹಕ್ಕಿನ ಭಾಗವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಯಾವುದೇ ಪ್ರಚೋದನೆಯಿಲ್ಲದೆ ದಾಳಿ ನಡೆಸಲಾಗಿದೆ’ ಎಂದು ಅವರು ಹೇಳಿದ್ದಾರೆ.






