ತಾಯಿಯ ಆರೈಕೆಗಾಗಿ 15 ದಿನಗಳ ಮಧ್ಯಂತರ ಜಾಮೀನು ಕೋರಿದ್ದ ಉಮರ್ ಖಾಲಿದ್ ಅರ್ಜಿ ವಜಾ

ಉಮರ್ ಖಾಲಿದ್ | Photo Credit : PTI
ಹೊಸದಿಲ್ಲಿ: ದಿಲ್ಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ.
ಇತ್ತೀಚೆಗೆ ನಿಧನರಾದ ತಮ್ಮ ಮಾವನ 40ನೇ ದಿನದ ಧಾರ್ಮಿಕ ವಿಧಿವಿಧಾನಗಳಾದ ‘ಚೆಹ್ಲುಮ್’ನಲ್ಲಿ ಪಾಲ್ಗೊಳ್ಳಲು ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ತಮ್ಮ ತಾಯಿಯ ಆರೈಕೆಗೆ ಅವಕಾಶ ನೀಡುವಂತೆ ಕೋರಿ ಉಮರ್ ಖಾಲಿದ್ 15 ದಿನಗಳ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೈ ಅವರು ಜಾಮೀನು ಮಂಜೂರು ಮಾಡಲು ನಿರಾಕರಿಸಿದರು.
2020ರ ಫೆಬ್ರುವರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ನಡೆದ ಪ್ರತಿಭಟನೆಗಳ ವೇಳೆ ದಿಲ್ಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 53 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಈ ಪ್ರಕರಣದಲ್ಲಿ ಉಮರ್ ಖಾಲಿದ್ ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (UAPA) ಅಡಿಯಲ್ಲಿ ಬಂಧಿಸಲಾಗಿದೆ.




