ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನದ ನಿರೀಕ್ಷೆ

ವಿಜಯಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ, ವಿಜಯಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಮುಂದಿನ ಸಚಿವ ಸಂಪುಟ ವಿಸ್ತರಣೆಯ ಕುರಿತು ಚರ್ಚೆಗಳು ಗರಿಗೆದರಿವೆ.
ಜಿಲ್ಲೆಯ ಪ್ರಭಾವಿ ನಾಯಕ ಎಂ.ಬಿ. ಪಾಟೀಲರಿಗೆ ಈಗಾಗಲೇ ಸಚಿವ ಸ್ಥಾನ ಲಭಿಸಿದ್ದು, ಬೆಂಬಲಿಗರಲ್ಲಿ ಹರ್ಷ ಮೂಡಿಸಿದೆ. ಆದರೆ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆಗಳ ಕುರಿತು ಚರ್ಚೆಗಳು ಜೋರಾಗಿದ್ದು, ಈ ಕುರಿತು ಎಂ.ಬಿ. ಪಾಟೀಲರು ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮುಂಬರುವ ಜೂನ್ 19ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಪ್ರಮುಖ ನಾಯಕರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ರೇಸ್ನಲ್ಲಿ ತ್ರಿವಳಿ ನಾಯಕರು: ಶಿವಾನಂದ ಪಾಟೀಲ, ಯಶವಂತರಾಯ ಗೌಡ ಪಾಟೀಲ ಮತ್ತು ಸಿ.ಎಸ್. ನಾಡಗೌಡ ಅವರು ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದಾರೆ. ಇವರಲ್ಲಿ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆ ಇದ್ದು, ಜಿಲ್ಲೆಯ ಪ್ರತಿನಿಧಿತ್ವ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಇಂಡಿ ಕ್ಷೇತ್ರಕ್ಕೆ ಸಿಗುತ್ತಾ ಐತಿಹಾಸಿಕ ಅವಕಾಶ?: ಇಂಡಿ ಕ್ಷೇತ್ರದಿಂದ ಇದುವರೆಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ, ಮೂರು ಬಾರಿ ಶಾಸಕರಾಗಿರುವ ಯಶವಂತರಾಯ ಗೌಡ ಪಾಟೀಲರಿಗೆ ಈ ಬಾರಿ ಅವಕಾಶ ಸಿಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮ ನಿಲುವಿನ ದೃಢತೆಯಿಂದಲೇ ಅವರು ಪಕ್ಷದೊಳಗೆ ಗುರುತಿಸಿಕೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಅವರಿಗೆ ಬೆಂಬಲ ಹೆಚ್ಚಿದೆ.
ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡರು ಪ್ರಸ್ತುತ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಅಧ್ಯಕ್ಷರಾಗಿದ್ದು, ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ಹೆಚ್ಚಿರುವುದರಿಂದ, ಸಚಿವ ಸ್ಥಾನದ ರೇಸ್ನಲ್ಲಿ ಅವರ ಹೆಸರು ಸದ್ಯಕ್ಕೆ ಕೊನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲರು ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿದ್ದರು. ಈ ಬಾರಿ ಅವಕಾಶ ಕೈತಪ್ಪಿದರೂ, ಮುಂಬರುವ ವಿಸ್ತರಣೆಯಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದೆ. ಅವರು ಪಕ್ಷದೊಳಗೆ ಪ್ರಭಾವಿ ನಾಯಕರಾಗಿದ್ದು, ಮುಂದಿನ ನಿರ್ಧಾರಗಳತ್ತ ಗಮನ ಸೆಳೆದಿದ್ದಾರೆ.
ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಪಾಲಿಗೆ ಇನ್ನೊಂದು ಸ್ಥಾನ ಸಿಗುತ್ತದೆಯೇ ಎಂಬುದರತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.
ಜಿಲ್ಲೆಯಲ್ಲಿ ಕಾಂಗ್ರೆಸ್ನಿಂದ ಒಟ್ಟು 6 ಮಂದಿ ಶಾಸಕರು ಆಯ್ಕೆಯಾಗಿರುವ ಹಿನ್ನೆಲೆ, ಸಮಗ್ರ ಅಭಿವೃದ್ಧಿಗಾಗಿ ಮತ್ತೊಂದು ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ವೈಯಕ್ತಿಕವಾಗಿ ಮನವಿ ಸಲ್ಲಿಸಿದ್ದೇನೆ.
-ಎಂ.ಬಿ.ಪಾಟೀಲ್, ಸಚಿವರು






