ಸೇಡಂ: ನನೆಗುದಿಗೆ ಬಿದ್ದ ಬಿಇಒ ಕಚೇರಿಕಾಮಗಾರಿ

ಸೇಡಂ: ಪಟ್ಟಣದಲ್ಲಿ ಸುಸಜ್ಜಿತ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಕಚೇರಿ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಯೋಜನೆಯು ಹಲವು ವರ್ಷಗಳಿಂದ ಪೂರ್ಣಗೊಳ್ಳದೆ ನೆನೆಗುದಿಗೆ ಬಿದ್ದಿರುವುದರಿಂದ ಶಿಕ್ಷಣ ಇಲಾಖೆಯ ಸೇವೆ ಪಡೆಯುವ ಜನರಿಗೆ ತೊಂದರೆ ಉಂಟುಮಾಡುತ್ತಿದೆ.
ಪ್ರಸ್ತುತ ಬಿಇಒ ಕಚೇರಿ ಹಳೆಯ ಜೂನಿಯರ್ ಕಾಲೇಜು ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮೂಲಭೂತ ಸೌಕರ್ಯಗಳ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಶಿಕ್ಷಕರಿಗೆ ಕುಳಿತುಕೊಳ್ಳಲು ಆಸನಗಳಿಲ್ಲ ಮಾತ್ರವಲ್ಲ. ಕುಡಿಯುವ ನೀರಿನ ಸೌಲಭ್ಯವೂ ಲಭ್ಯವಿಲ್ಲ. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿಯೇ ಸರಕಾರಿ ಸೇವೆ ಪಡೆಯಬೇಕಾದ ಪರಿಸ್ಥಿತಿ ಮುಂದುವರೆದಿದೆ.
ಮಳಖೇಡ, ಸಂಗಾವಿ ಎಂ, ಹಂಗನಹಳ್ಳಿ, ನಿಲಹಳ್ಳಿ, ಹಂದರಕಿ, ಕೋಡ್ಲಾ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ಮತ್ತು ಶಿಕ್ಷಕರು ಕಚೇರಿಗೆ ಆಗಮಿಸುತ್ತಾರೆ. ಆದರೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ದಿನನಿತ್ಯ ಪರದಾಡುವಂತಾಗಿದೆ.
2022-23ನೇ ಸಾಲಿನ ಡಿಎಮ್ಎಫ್ ಯೋಜನೆಯಡಿ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಚೇರಿ ನಿರ್ಮಾಣಕ್ಕೆ ಅನುಮೋದನೆ ದೊರೆತಿತ್ತು. ಆಗಿನ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರಿಂದ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಲಬುರಗಿ ಮೂಲದ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿದ್ದರೂ, ಆರಂಭಿಕ ಹಂತದ ಕೆಲಸಗಳ ನಂತರ ಕಾಮಗಾರಿ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ‘ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಗೆ ಪತ್ರ ಬರೆಯಲಾಗಿದೆ. ಶೀಘ್ರದಲ್ಲೇ ಮರು ಟೆಂಡರ್ ಕರೆಯುವ ಮೂಲಕ ಕಾಮಗಾರಿ ಪುನರಾರಂಭಿಸಲಾಗುವುದು’ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಸ್ಪಂದಿಸಿಲ್ಲ. ಅವರ ನಿರ್ಲಕ್ಷ್ಯದಿಂದ ಕಾಮಗಾರಿ ನಿಂತಿದೆ. ಮರು ಟೆಂಡರ್ ಪ್ರಕ್ರಿಯೆ ಆರಂಭಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
-ವಿಶ್ವನಾಥ್, ಎಇಇ
ಇಂಜಿನಿಯರಿಂಗ್ ಉಪವಿಭಾಗ
ಮೂರು-ನಾಲ್ಕು ವರ್ಷಗಳಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಅನುದಾನ ಇದ್ದರೂ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಕಟ್ಟಡವನ್ನು ಪೂರ್ಣಗೊಳಿಸಬೇಕು.
-ವರದಾಸ್ವಾಮಿ ಬಿ.ಹಿರೇಮಠ
ಜಯಕರ್ನಾಟಕ ವೇದಿಕೆ ಉಪಾಧ್ಯಕ್ಷ ಜಯಕರ್ನಾಟಕ ವೇದಿಕೆ ಉಪಾಧ್ಯಕ್ಷ






