ಮಾನ್ವಿಯ ವಿದ್ಯಾರ್ಥಿನಿಗೆ ಭಾರತ್ ಸ್ಕೌಟ್ಸ್–ಗೈಡ್ಸ್ ರಾಜ್ಯ ಪ್ರಶಸ್ತಿ

ಮಾನ್ವಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ರಾಯಚೂರು ಹಾಗೂ ಸ್ಥಳೀಯ ಸಂಸ್ಥೆ ಮಾನ್ವಿಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬುಲ್ಬುಲ್ ವಿಭಾಗದ ರಾಜ್ಯ ಪ್ರಶಸ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಾನ್ವಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಸಯ್ಯದಾ ಜಿಕ್ರಾ ಫಾತಿಮಾ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ಲೋಕಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯದ ಹೆಚ್ಚುವರಿ ರಾಜ್ಯ ಮುಖ್ಯ ಆಯುಕ್ತರಾದ ಯು.ಟಿ. ಖಾದರ್ ಅವರು ವಿದ್ಯಾರ್ಥಿನಿಗೆ ಪ್ರಮಾಣಪತ್ರ ನೀಡಿ ಗೌರವಿಸಿದರು.
ವಿದ್ಯಾರ್ಥಿನಿ ಶಿಬಿರ ವಾಸ, ಕೌಶಲ್ಯಾಧಾರಿತ ಕಲಿಕೆ, ದೇಶಾಭಿಮಾನ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯ ಪ್ರಶಸ್ತಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದಾಳೆ.
ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ರಾಜ್ಯ ಸಂಸ್ಥೆಯ ಪದಾಧಿಕಾರಿಗಳು, ಜಿಲ್ಲೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ಶಾಲಾ ಕಾರ್ಯದರ್ಶಿ ಸೈಯದ್ ಮುಸ್ತಬಹ ಖಾದ್ರಿ, ಮುಖ್ಯ ಶಿಕ್ಷಕಿ ನಾಗರತ್ನ ದೇಸಾಯಿ, ಮಾನ್ವಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಲರಾಮಕೃಷ್ಣ ವಕೀಲರು, ಕಾರ್ಯದರ್ಶಿ ರಾಮಲಿಂಗಪ್ಪ, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ ದೇಸಾಯಿ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.






