ರಾಯಚೂರು | ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯ

ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನವೇ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಖಂಡನೀಯ. ಕೂಡಲೇ ರಾಜೀನಾಮೆ ನೀಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಸುಮಾರು 187 ಕೋಟಿ ರೂ. ಹಣದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದ ತನಿಖೆ ಮುಂದುವರಿದಿರುವ ಸಂದರ್ಭದಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಸರ್ಕಾರದ ನಿಲುವಿನ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.
ಹಗರಣದ ಗಂಭೀರತೆಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಪ್ಪಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ನಾಗೇಂದ್ರ ಅವರಿಗೆ ಸಂಪೂರ್ಣ ಕ್ಲೀನ್ಚಿಟ್ ದೊರೆತಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.
ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣದ ಅವ್ಯವಹಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡಿರುವುದು ಆ ಸಮುದಾಯಕ್ಕೆ ಮಾಡಿದ ದ್ರೋಹವಾಗಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಟ್ಟು, ಅಗತ್ಯವಿದ್ದರೆ ಅವರದೇ ಸಮುದಾಯದ ಮತ್ತೊಬ್ಬ ಅರ್ಹರನ್ನು ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದರು.
ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹಾಗೂ ಜೆಡಿಎಸ್ ಜತೆಗೂಡಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಅಗತ್ಯವಿದ್ದರೆ ಹೋರಾಟವನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದು ವೀರನಗೌಡ ಲೆಕ್ಕಿಹಾಳ ಎಚ್ಚರಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ಮೂಲಕ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಸಿದ್ದನಗೌಡ ನೆಲಹಾಳ್, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ವೀರೇಶ್ ನಾಯಕ, ನರಸಿಂಹ ನಾಯಕ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕ ವಿ.ಪಿ. ರೆಡ್ಡಿ ಉಪಸ್ಥಿತರಿದ್ದರು






