2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದರೆ ಅಲ್ಪಸಂಖ್ಯಾತರಿಗೆ ಉಪ ಮುಖ್ಯಮಂತ್ರಿ ಸ್ಥಾನ ಅನಿವಾರ್ಯ: ಮುಜಾಹಿದ್ ಮರ್ಚೆಡ್

ರಾಯಚೂರು: ಕರ್ನಾಟಕದ ಮುಸ್ಲಿಂ ಸಮುದಾಯವು ದಶಕಗಳಿಂದಲೂ ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ. ಆದರೆ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸಮುದಾಯಕ್ಕೆ ತಕ್ಕ ಮಟ್ಟಿನ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಅಸಮಾಧಾನ ಹೆಚ್ಚುತ್ತಿದೆ ಎಂದು ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಮರ್ಚೆಡ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯವಾಗಿ ಗೌರವಯುತ ಸ್ಥಾನಮಾನ ನೀಡುವಲ್ಲಿ ಇನ್ನಷ್ಟು ಧೈರ್ಯಶಾಲಿ ನಿರ್ಧಾರಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಂದರ್ಭ, ಖಾಲಿಯಾಗಲಿರುವ ಉಪ ಮುಖ್ಯಮಂತ್ರಿ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯದಡಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಹಿರಿಯ ನಾಯಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅಥವಾ ಯು.ಟಿ.ಖಾದರ್ ಇವರಲ್ಲಿ ಒಬ್ಬರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವುದು ಸಮಂಜಸ ಹಾಗೂ ನ್ಯಾಯಸಮ್ಮತ ಕ್ರಮವಾಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿರುವ ಮುಸ್ಲಿಂ ಸಮುದಾಯವು ಚುನಾವಣಾ ಸಂದರ್ಭಗಳಲ್ಲಿ ತನ್ನ ಸಂಖ್ಯಾಬಲವನ್ನು ಪ್ರದರ್ಶಿಸಿದೆ. ಈ ನಿಷ್ಠೆಯನ್ನು ಗೌರವಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡುವುದು ರಾಜಕೀಯವಾಗಿ ಸಹ ಅಗತ್ಯವಾಗಿದೆ. ಸಮುದಾಯದ ವಿಶ್ವಾಸವನ್ನು ಗಟ್ಟಿಗೊಳಿಸಲು ಈ ನಿರ್ಧಾರ ಅತ್ಯಂತ ಮುಖ್ಯವಾಗಿದೆ.
2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ನೀಡದಿದ್ದರೆ ಅದರ ರಾಜಕೀಯ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಮುಜಾಹಿದ್ ಮರ್ಚೆಡ್ ಎಚ್ಚರಿಸಿದ್ದಾರೆ.
ಇದಲ್ಲದೆ, ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗವು ವಿವಿಧ ಮುಸ್ಲಿಂ ಸಂಘಟನೆಗಳು, ಧಾರ್ಮಿಕ ಮುಖಂಡರು ಹಾಗೂ ಯುವಕರೊಂದಿಗೆ ಚರ್ಚೆ ನಡೆಸಿದ್ದು, ಈ ಬೇಡಿಕೆ ತೀವ್ರವಾಗಿ ಮುಂದುವರಿದಿದೆ.
ಅಲ್ಪ ಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಕೊಡುವುದು ಕಾಂಗ್ರೆಸ್ ನ ಜವಬ್ದಾರಿಯಾಗಿದೆ. ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಮತ್ತು ಗೌರವ ನೀಡುವ ಮೂಲಕ ಮಾತ್ರ ಕಾಂಗ್ರೆಸ್ ಪಕ್ಷ ತನ್ನ ಬದ್ಧತೆಯನ್ನು ನೈಜಗೊಳಿಸಿ, 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಮುಜಾಹಿದ್ ಮರ್ಚೆಡ್ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.






