Devadurga | ಜನಸ್ಪಂದನೆಯಲ್ಲಿ ಗದ್ದಲ : ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಶಾಸಕಿ ಸೂಚನೆ

ದೇವದುರ್ಗ : ಪಟ್ಟಣದ ಎಲ್ಲಾ ವಾರ್ಡಗಳ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸೋಮವಾರ ಪುರಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನಸ್ಪಂದನೆ ಕಾರ್ಯಕ್ರಮ ಸಾರ್ವಜನಿಕರಿಗೆ ಅನುಕೂಲಕರವಾಗಬೇಕು ಎಂದು ಶಾಸಕಿ ಕರೆಮ್ಮ.ಜಿ. ನಾಯಕ್ ಹೇಳಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಿದ್ಯುತ್ ಕಂಬಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಸಾರ್ವಜನಿಕರು ಶಾಸಕಿ ಎದುರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಪಟ್ಟಣದಲ್ಲಿ ಮಟ್ಕಾ, ಬೆಟ್ಟಿಂಗ್ ಹಾಗೂ ಅಕ್ರಮ ಮದ್ಯದ ಚಟುವಟಿಕೆಗಳು ಹೆಚ್ಚಾಗಿದ್ದು, ಯುವಕರು ದುಷ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಶಾಸಕಿ ತಿಳಿಸಿ, ಇಂತಹ ಅಕ್ರಮ ಚಟುವಟಿಕೆಗಳಿಗೆ ತಕ್ಷಣ ಕಡಿವಾಣ ಹಾಕುವಂತೆ ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜನಸ್ಪಂದನೆ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪ್ರತಿ ವಾರ್ಡದಲ್ಲೂ ಕುಡಿಯುವ ನೀರು, ರಸ್ತೆ, ವಿದ್ಯುತ್ ದೀಪ, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಅಲಮುದ್ದೀನ್, ಶಿವರಾಜ್ ಪೂಜಾರಿ, ಡಾ. ಬನೇಶ್, ದೇವೇಂದ್ರ ಕಡೇಕರ್, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ, ಪಿ.ಐ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪಟ್ಟಣದಲ್ಲಿ ಬಿಡಾಡಿ ದನಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಖಾತಾ, ಮುಟೇಷನ್ ಹಾಗೂ ಕಟ್ಟಡ ಅನುಮತಿಗೆ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ವಿವಿಧ ಸೇವೆಗಳ ದರಪಟ್ಟಿಯನ್ನು ಸಾರ್ವಜನಿಕರಿಗೆ ಗೋಚರವಾಗುವಂತೆ ಪ್ರದರ್ಶಿಸಬೇಕು ಎಂದು ಗಂಗನಗೌಡ ಗೌರಂಪೇಟ ಒತ್ತಾಯಿಸಿದರು.
ಪಟ್ಟಣದ ಎಲ್ಲ ವಾರ್ಡ್ಗಳಲ್ಲಿ ಚರಂಡಿ ಹಾಗೂ ರಸ್ತೆ ಸಮಸ್ಯೆಗಳು ಗಂಭೀರವಾಗಿವೆ. ಪುರಸಭೆ ಮುಖ್ಯಾಧಿಕಾರಿ ಸಮಸ್ಯೆಗಳನ್ನು ಆಲಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಹೈಟೆಕ್ ಶೌಚಾಲಯ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟದ ಆರೋಪಗಳಿದ್ದರೂ ಸ್ಪಷ್ಟನೆ ನೀಡಲಾಗಿಲ್ಲ ಎಂದು ರೈತ ಸಂಘದ ಮುಖಂಡ ತಿಮ್ಮನಗೌಡ ಆರೋಪಿಸಿದರು.







