ದೇವದುರ್ಗ | ಬೇಸಿಗೆ ಹಿನ್ನೆಲೆ; ನೀರು, ವಿದ್ಯುತ್ ಪೂರೈಕೆಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕಿ ತಾಕೀತು

ದೇವದುರ್ಗ : ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ದೇವದುರ್ಗ ಹಾಗೂ ಅರಕೇರಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಗುಡ್ಡಗಾಡು ಪ್ರದೇಶದ ತಾಂಡಾ-ದೊಡ್ಡಿಗಳ ನಿವಾಸಿಗಳ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಪ್ರಮಾಣಿಕ ಸೇವೆ ನೀಡಬೇಕು ಎಂದು ಸೂಚಿಸಿದರು.
ಕೆರೆಗಳ ನಿರ್ವಹಣೆಗೆ ಅನುದಾನ ಬಳಸಿದರೂ, ಹಳ್ಳಿಗಳಿಗೆ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆ ತನಿಖೆ ನಡೆಸುವಂತೆ ಜಿಪಂ ಉಪ ಕಾರ್ಯದರ್ಶಿ ಶರಣಬಸವರಾಜ ಅವರಿಗೆ ನಿರ್ದೇಶನ ನೀಡಿದರು.
ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಕುರಿತು ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಕೆಲಸ ಮಾಡಲು ಮನಸ್ಸಿಲ್ಲದಿದ್ದರೆ ಸ್ಥಾನ ಬಿಡುವಂತೆ ಎಚ್ಚರಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸ್ಪಂದಿಸಲು ಅಸಾಧ್ಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಬ್ಬೂರು ಗ್ರಾಮದಲ್ಲಿ ರಾಜ್ಯ ಹೆದ್ದಾರಿ ಪಕ್ಕದ ಚರಂಡಿ ನೀರು ರಸ್ತೆಗೆ ಹರಿಯುತ್ತಿರುವ ಸಮಸ್ಯೆ ಪರಿಹಾರಕ್ಕಾಗಿ ತಹಶೀಲ್ದಾರ ನೇತೃತ್ವದಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಊಟಿ ಕ್ರಾಸ್ ಬಳಿ ನೀರಿನ ಕೊರತೆ ನಿವಾರಣೆಗೆ ಬೋರ್ವೆಲ್ ಕೊರೆಸುವಂತೆ ಪಿಡಿಒಗೆ ಆದೇಶಿಸಿದರು.
ಹೂವಿನಹೆಡಗಿ ಗ್ರಾಮದಲ್ಲಿರುವ ಆರ್ಒ ಪ್ಲಾಂಟ್ ಅನ್ನು ಖಾಸಗಿ ಮನೆ ಆವರಣದಿಂದ ಸ್ಥಳಾಂತರಿಸಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಸ್ಥಾಪಿಸುವಂತೆ ಸೂಚಿಸಿದರು. ಬಂಕಲದೊಡ್ಡಿ ಗ್ರಾಮದಲ್ಲಿ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ಸರಿಪಡಿಸಿ ನೀರು ಪೂರೈಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಶೀಘ್ರದಲ್ಲೇ ಜನಸಂಪರ್ಕ ಕಾರ್ಯಕ್ರಮ ಆಯೋಜಿಸಲಾಗುವುದಾಗಿ ತಿಳಿಸಿದ ಅವರು, ಯಾವುದೇ ನೆಪ ಹೇಳಿ ಕಾಲಹರಣ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಜೆಸ್ಕಾಂ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಕೆಲ ಹಳ್ಳಿಗಳಲ್ಲಿ ಎರಡು-ಮೂರು ದಿನ ವಿದ್ಯುತ್ ಇಲ್ಲದ ಪರಿಸ್ಥಿತಿ ಉಂಟಾಗಿದ್ದು, ಬೇಸಿಗೆ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡಲು ಕ್ರಮವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಶರಣಬಸವರಾಜ, ತಹಶೀಲ್ದಾರ ನಾಗಮ್ಮ ಕಟ್ಟಿಮನಿ, ತಾಪಂ ಇಒ ರಾಜೇಂದ್ರ ಕುಮಾರ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






