ಡಿಎಪಿ ರಸಗೊಬ್ಬರ ಕೊರತೆ ಖಂಡಿಸಿ ರೈತರ ಆಕ್ರೋಶ; ಸಮರ್ಪಕ ಪೂರೈಕೆಗೆ ಆಗ್ರಹ

ರಾಯಚೂರು, ಜು.31: ಮುಂಗಾರು ಮಳೆ ಉತ್ತಮವಾಗಿದ್ದರೂ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಡಿಎಪಿ ಸೇರಿದಂತೆ ರಸಗೊಬ್ಬರಗಳು ದೊರೆಯುತ್ತಿಲ್ಲ ಎಂದು ಆರೋಪಿಸಿ ನೂರಾರು ರೈತರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಆದರೆ ರೈತರಿಗೆ ಅಗತ್ಯವಿರುವಷ್ಟು ಗೊಬ್ಬರ ನೀಡದೇ, ಟೋಕನ್ ವ್ಯವಸ್ಥೆ ಮೂಲಕ ಕೇವಲ 100 ಚೀಲಗಳನ್ನು ಮಾತ್ರ ವಿತರಿಸಲಾಗುತ್ತಿದೆ. ಉಳಿದ ರೈತರು ಎಲ್ಲಿಗೆ ಹೋಗಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಡಿಎಪಿ ಖರೀದಿಸುವ ರೈತರಿಗೆ ಅನಿವಾರ್ಯವಾಗಿ ನ್ಯಾನೋ ಯೂರಿಯಾ (₹220) ಖರೀದಿಸುವಂತೆ ಹೇಳಲಾಗುತ್ತಿದೆ ಎಂದು ರೈತರು ದೂರಿದರು. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಯಾವುದೇ ರಸಗೊಬ್ಬರದೊಂದಿಗೆ ಮತ್ತೊಂದು ಉತ್ಪನ್ನವನ್ನು ಕಡ್ಡಾಯವಾಗಿ ಜೋಡಿಸಿ (ಅಟ್ಯಾಚ್ ಮಾಡಿ) ಮಾರಾಟ ಮಾಡಬಾರದು. ಈ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕೃಷಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೆಲವು ಆಯ್ದ ರೈತರಿಗೆ ಮಾತ್ರ ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಸಾಮಾನ್ಯ ರೈತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಡಿಎಪಿ ಕೊರತೆಯಿಂದ ಬಿತ್ತನೆ ಮತ್ತು ಬೆಳೆ ನಿರ್ವಹಣೆಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕೂಡಲೇ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಜಿಲ್ಲೆಗೆ ಪೂರೈಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯ ವೇಳೆ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ರೈತರ ಅಹವಾಲು ಆಲಿಸಿ, ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಅಗತ್ಯ ಪ್ರಮಾಣದ ಡಿಎಪಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದಾಗ್ಯೂ, ಭರವಸೆ ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.






