ಹಟ್ಟಿ | ಕಾಕಾನಗರ ಮೂಲಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ

ಹಟ್ಟಿ : ಕಾಕಾನಗರ ವಾರ್ಡ್ನ ಮೂಲಭೂತ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಸೋಮವಾರ ಕಾಕಾನಗರದಿಂದ ಹಟ್ಟಿ ಪಟ್ಟಣ ಪಂಚಾಯ್ತಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಬಳಿಕ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಜಗನಾಥ್ ದೇಸಾಯಿ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಲಾಯಿತು.
ಮನವಿಯಲ್ಲಿ ಹೈಟೆಕ್ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ಯೋಗ್ಯವಾಗಿಸುವುದು, ವಾರ್ಡ್ನ ರಸ್ತೆಗಳು ಹಾಗೂ ಚರಂಡಿಗಳನ್ನು ನಿರ್ಮಿಸುವುದು, ನಿಯಮಿತವಾಗಿ ಕುಡಿಯುವ ನೀರು ಪೂರೈಸುವುದು, ಬಳಕೆಯ ನೀರಿಗಾಗಿ ಹೊಸ ಬೋರ್ವೆಲ್ಗಳನ್ನು ಕೊರೆಸುವುದು, ಎರಡು ಕಡೆಗಳಲ್ಲಿ ದೋಭಿ ಘಾಟ್ ನಿರ್ಮಿಸುವುದು, ಜಾಲಿ ಗಿಡಗಳನ್ನು ತೆರವುಗೊಳಿಸುವುದು, ಹೈಟೆಕ್ ಶೌಚಾಲಯದ ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್ಫಾರ್ಮರ್ ಅನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು, ಅಂಗನವಾಡಿ ಕೇಂದ್ರದ ಬಳಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟುವುದು ಸೇರಿದಂತೆ ವಿವಿಧ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಈ ವೇಳೆ ಮಾತನಾಡಿದ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, ಪಟ್ಟಣದ ಜನವಸತಿ ಪ್ರದೇಶಗಳ ಮೂಲಭೂತ ಸಮಸ್ಯೆಗಳ ಬಗ್ಗೆ ಆಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ಜನಪರ ಆಡಳಿತಕ್ಕಾಗಿ ಸಿಪಿಐ(ಎಂ) ಪಕ್ಷವನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಅಧ್ಯಕ್ಷೆ ವನಜಾಕ್ಷಿ ಮಾತನಾಡಿ, ಕಾಕಾನಗರ ವಾರ್ಡ್ನ ಮಹಿಳೆಯರು ಹಾಗೂ ಸಾರ್ವಜನಿಕರು ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸದಿದ್ದರೆ ಪಟ್ಟಣ ಪಂಚಾಯ್ತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, ಪಕ್ಷದ ಸದಸ್ಯರಾದ ಶಾಂತಕುಮಾರಿ, ಸಾಹೀರಾ ಬಾನು, ರಿಯಾಜ್ ಖುರೇಷಿ, ಹಾಜಿಬಾಬು ಕಟ್ಟಿಮನಿ, ಶಂಶುದ್ದೀನ್ ಔಟಿ, ರಮೇಶ್ ಜೆ., ಮೌನೇಶ ಕಡ್ಡೋಣಿ, ಅಲ್ಲಾಭಕ್ಷ, ಮಹಾಂತೇಶ್ ಬುದ್ದಿನ್ನಿ, ದುರುಗಮ್ಮ, ಇಮ್ರಾನ್, ಖಾಜಾ ಮೊಯಿನುದ್ದೀನ್, ಅಂಬಮ್ಮ, ನಿಂಗಪ್ಪ, ದಾವೂದ್, ಶ್ರೀಧರ್, ಈರಮ್ಮ ಸೇರಿದಂತೆ ವಾರ್ಡ್ನ ಸಾರ್ವಜನಿಕರು ಭಾಗವಹಿಸಿದ್ದರು.






