ನಿಜಾಮರ ಕಾಲದ ಕುಡಿಯುವ ನೀರಿನ ಪೈಪ್ಲೈನ್ ಪರಿಶೀಲಿಸಿ ಅಪ್ಗ್ರೇಡ್ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ
ಪ್ರಗತಿ ಪರಿಶೀಲನಾ ಸಭೆ

ರಾಯಚೂರು : ಹೈದರಾಬಾದ್ ನಿಜಾಮರ ಕಾಲದಲ್ಲಿ ಅಳವಡಿಸಲಾದ ಕುಡಿಯುವ ನೀರಿನ ಪೈಪ್ಲೈನ್ಗಳಿಗೆ ಹಲವು ವರ್ಷಗಳಾಗಿರುವುದರಿಂದ ಅವುಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ನವೀಕರಣ (ಅಪ್ಗ್ರೇಡ್) ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಯಚೂರು ನಗರದ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯಗಳನ್ನೂ ಅದಕ್ಕೆ ಅನುಗುಣವಾಗಿ ವಿಸ್ತರಿಸಬೇಕಾಗಿದೆ ಎಂದರು.
ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ನೀರಿನ ಲಭ್ಯತೆ ಇದ್ದರೂ ನಗರದಲ್ಲಿ 24x7 ಕುಡಿಯುವ ನೀರು ಪೂರೈಕೆ ಆಗಬೇಕಾಗಿತ್ತು. ಈಗಿರುವ ಸಮಸ್ಯೆಗಳನ್ನು ಸರಿಪಡಿಸಿ ನಗರದ ಎಲ್ಲ ಬಡಾವಣೆಗಳಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ಕೆಲವು ಬಡಾವಣೆಗಳಲ್ಲಿ ಪೈಪ್ಲೈನ್ ಇದ್ದರೂ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಂತಹ ಪ್ರದೇಶಗಳಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಂಡು ಎಲ್ಲರಿಗೂ ಸಮಾನವಾಗಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು.
ಅನುದಾನ ಸಮರ್ಪಕ ಬಳಕೆಗೆ ಸೂಚನೆ :
ಮಹಾತ್ಮ ಗಾಂಧಿ ರಾಷ್ಟ್ರೀಯ ನಗರ ವಿಕಾಸ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಅನುದಾನದ ಕೊರತೆ ಇದ್ದರೆ ಕ್ರಿಯಾ ಯೋಜನೆ (ಆ್ಯಕ್ಷನ್ ಪ್ಲಾನ್) ಸಲ್ಲಿಸಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಕೆರೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ :
ಸಭೆಯಲ್ಲಿ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಮಾತನಾಡಿ, ನಗರ ವಿಕಾಸ ಯೋಜನೆಯಡಿ ಆಶ್ರಯ ಕಾಲೊನಿ, ಕುಲಸುಂಬಿ ಕಾಲೊನಿ ಸೇರಿದಂತೆ ವಿವಿಧ ಕೊಳಗೇರಿ ಬಡಾವಣೆಗಳಲ್ಲಿ ರಸ್ತೆ, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
ಐತಿಹಾಸಿಕ ಮನ್ಸಲಾಪುರ ಕೆರೆ ಮತ್ತು ನೀರಭಾವಿ ಕುಂಟಾ ಕೆರೆ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳ ಅನುದಾನದಿಂದ ಪೌರಕಾರ್ಮಿಕರಿಗೆ ಸಮವಸ್ತ್ರ, ವೈಯಕ್ತಿಕ ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವ ಎನ್.ಎಸ್.ಬೋಸರಾಜು, ಎಂಎಲ್ಸಿ ವಸಂತ ಕುಮಾರ,ಶಾಸಕ ದದ್ದಲ್ ಬಸನಗೌಡ ಮಾತನಾಡಿದರು.






