ಬೆಳಗಾವಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಸ್ವಾಧೀನ: ರೈತರು, ಪೊಲೀಸರ ನಡುವೆ ವಾಗ್ವಾದ

ರಾಯಚೂರು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ಹಣ ನೀಡದೆ ಕಾಮಗಾರಿ ನಡೆಸುವಂತಿಲ್ಲ ಎಂದು ರೈತರು ಪಟ್ಟು ಹಿಡಿದಾಗ ರೈರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಭಾರತ ಮಾಲಾ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬೆಳಗಾವಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ-748ಎ(ಎನ್ಎಚ್)ಗಾಗಿ ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕನಿಷ್ಠ ಕಾನೂನು ನಿಯಮಗಳನ್ನು ಪಾಲಿಸುತ್ತಿಲ್ಲ. ನಿಯಮ ಉಲ್ಲಂಘಿಸಿದ ಅಧಿಕಾರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಅವೈಜ್ಞಾನಿಕವಾಗಿ ಜಮೀನು ಸ್ವಾಧೀನ ಪ್ರಕ್ರಿಯೆ ನಡೆಸಲಾಗಿದೆ. ಭೂ ಸಂತ್ರಸ್ತರಿಗೆ ಆಕ್ಷೇಪಣೆ ಆಲಿಸದೇ ಅನ್ಯಾಯ ಮಾಡಲಾಗಿದೆ. ಸರಿಯಾಗಿ ಅಳತೆ ಹಾಗೂ ಖರೀದಿಸಿದ ಜಮೀನಿನ ದುಡ್ಡನ್ನು ಕೊಡದೆ ಕಾಲಹರಣ ಮಾಡುತ್ತಿದ್ದಾರೆ. ಯಾವುದೇ ಸುಳಿವು ನೀಡದೇ ಅಧಿಕಾರಿಗಳು ರೈತರು ಬೆಳೆದ ಬೆಳೆಗಳನ್ನು ನಾಶ ಪಡಿಸಿ ಕಾಮಗಾರಿಗೆ ಮುಂದಾಗಿದ್ದಾರೆ ಇದನ್ನು ರೈತರು ಪ್ರಶ್ನಿಸಿದ್ದಕ್ಕೆ ಪೊಲೀಸರ ಸಮ್ಮುಖದಲ್ಲಿ ದೌರ್ಜನ್ಯ ನಡೆಸಿದ್ದಾರೆ ಎಂದು ರೈತ ಮುಖಂಡ ಶರಣಪ್ಪ ಉದ್ಭಾಳ ಕಿಡಿಕಾರಿದರು.





