ಎಸ್ಐಆರ್ ಜಾಗೃತಿಗೆ ರಾಯಚೂರಿನಲ್ಲಿ ಮ್ಯಾರಥಾನ್–ಸೈಕ್ಲೋಥಾನ್

ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್–2026) ಹಾಗೂ ನಗರ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಯಚೂರು ನಗರದಲ್ಲಿ “ಸದೃಢ ದೇಹ – ಸ್ವಚ್ಛ ಸಮಾಜ – ಬಲಿಷ್ಠ ಪ್ರಜಾಪ್ರಭುತ್ವ” ಘೋಷಣೆಯೊಂದಿಗೆ ಮ್ಯಾರಥಾನ್ ಓಟ ಮತ್ತು ಸೈಕ್ಲೋಥಾನ್ ಆಯೋಜಿಸಲಾಯಿತು.
ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಸಿರು ಬಾವುಟ ತೋರಿಸುವ ಮೂಲಕ ಮ್ಯಾರಥಾನ್ಗೆ ಚಾಲನೆ ನೀಡಿದರು. ಶಾಲಾ–ಕಾಲೇಜು ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಸೇರಿದಂತೆ ನೂರಾರು ಮಂದಿ ಉತ್ಸಾಹದಿಂದ ಭಾಗವಹಿಸಿದರು.
ಕ್ರೀಡಾಂಗಣದಿಂದ ಆರಂಭವಾದ ಮ್ಯಾರಥಾನ್ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ತೀನ್ ಕಂದಿಲ್, ಮಹಾವೀರ ವೃತ್ತ, ಚಂದ್ರಮೌಳೇಶ್ವರ ವೃತ್ತ ಹಾಗೂ ಬಸವೇಶ್ವರ ವೃತ್ತ ಮಾರ್ಗವಾಗಿ ಸಂಚರಿಸಿ ಮತ್ತೆ ಕ್ರೀಡಾಂಗಣದಲ್ಲೇ ಮುಕ್ತಾಯವಾಯಿತು.
ಪುರುಷರ ವಿಭಾಗದಲ್ಲಿ ತಾಯಪ್ಪ ನಾಯಕ ಪ್ರಥಮ, ನರಸಿಂಹಲು ದ್ವಿತೀಯ ಹಾಗೂ ನರಸಿಂಹಲು ವಡವಟ್ಟಿ ತೃತೀಯ ಸ್ಥಾನ ಪಡೆದರು. ಮಹಿಳಾ ವಿಭಾಗದಲ್ಲಿ ಮಹೇಶ್ವರಿ ಪ್ರಥಮ, ನಂದಿತಾ ದ್ವಿತೀಯ ಹಾಗೂ ಪದ್ಮಾವತಿ ತೃತೀಯ ಬಹುಮಾನ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇ.90ಕ್ಕೂ ಹೆಚ್ಚು ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ಸಾರ್ವಜನಿಕರು ನಮೂನೆಗಳನ್ನು ಭರ್ತಿ ಮಾಡಿ ನಿಗದಿತ ಅವಧಿಯಲ್ಲಿ ಬಿಎಲ್ಒಗಳಿಗೆ ಸಲ್ಲಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಬಿಎಲ್ಒಗಳು ಮನೆಗಳಿಗೆ ಭೇಟಿ ನೀಡುವ ವೇಳೆ ಅಗತ್ಯ ದಾಖಲೆಗಳನ್ನು ಒದಗಿಸಿ ಸಾರ್ವಜನಿಕರು ಸಹಕರಿಸಬೇಕು ಎಂದು ಕರೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಮಾತನಾಡಿ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್ಐಆರ್ ಕಾರ್ಯ ಶೇ.87ರಷ್ಟು ಪೂರ್ಣಗೊಂಡಿದ್ದು, ಉಳಿದ ಪ್ರಕ್ರಿಯೆಯೂ ಶೀಘ್ರ ಪೂರ್ಣಗೊಳ್ಳಲಿದೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಸಹ ಸಹಕಾರ ನೀಡಬೇಕು ಎಂದು ತಿಳಿಸಿದರು.
ಇದಕ್ಕೂ ಮುನ್ನ ಎಸ್ಐಆರ್ ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವ ಉದ್ದೇಶದಿಂದ ಹಸ್ತಾಕ್ಷರ ಅಭಿಯಾನಕ್ಕೂ ಚಾಲನೆ ನೀಡಲಾಯಿತು.
ನಂತರ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸೇರಿದಂತೆ ವಿವಿಧ ಗಣ್ಯರು ಸೆಲ್ಫಿ ಸ್ಟ್ಯಾಂಡಿಗೆ ಫೋಟೋ ನೀಡಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಮಹಾನಗರ ಪಾಲಿಕೆ ಉಪ ಆಯುಕ್ತ ಶರಣಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಡಾ.ಟಿ.ರೋಣಿ, ರಾಯಚೂರು ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ರಾಯಚೂರು ತಹಸೀಲ್ದಾರ್ ಸುರೇಶ್ ವರ್ಮ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ್ ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಜಿ., ಮಹಾನಗರ ಪಾಲಿಕೆಯ ಜೋನಲ್ ಆಯುಕ್ತ ಮಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್ಐಆರ್ ಕಾರ್ಯಕ್ರಮದ ಸಂಯೋಜನಾ ಅಧಿಕಾರಿ ಡಾ.ದಂಡಪ್ಪ ಬಿರಾದಾರ್ ಅವರು ಮಾಡಿದರು.






