ಶಾಸಕ ಬಸನಗೌಡ ದದ್ದಲ್ ಅವರಿಂದ ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ರಾಯಚೂರು: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶನಿವಾರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶಾಸಕರ ಕಚೇರಿಯಿಂದ ಸಂಚಾರ ಆರಂಭಿಸಿದ ಅವರು, ಚಂದ್ರಬಂಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭಿಸಲಾದ ನೂತನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಬೇಕು ಎಂದು ಕರೆ ನೀಡಿದರು.
ಬಳಿಕ ಚಂದ್ರಬಂಡದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಆಹಾರ ವ್ಯವಸ್ಥೆ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಅಡುಗೆಮನೆ ಹಾಗೂ ಗ್ರಂಥಾಲಯವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಚಂದ್ರಬಂಡದಲ್ಲಿ ನೂತನ ರೈತರ ಸಂಪರ್ಕ ಕೇಂದ್ರ ಸ್ಥಾಪನೆಗೆ ಜಾಗ ಗುರುತಿಸಲಾಗಿದ್ದು, ಸರ್ವೆ ಪೂರ್ಣಗೊಂಡ ಬಳಿಕ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಕಟ್ಟಲಪೂರ ಕ್ರಾಸ್ನಿಂದ ತೆಲಂಗಾಣ ಗಡಿವರೆಗೆ ಸುಮಾರು 30 ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿ ₹14 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವುದಾಗಿ ತಿಳಿಸಿದ ಅವರು, ಡಿ. ರಾಂಪೂರ ಸಂಪರ್ಕಿಸುವ ಕೃಷ್ಣಾ ನದಿ ಸೇತುವೆ ಕಾಮಗಾರಿ ಹಾಗೂ ಕುರ್ವಕಲಾ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿರುವ ದ್ವೀಪ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ನಾರದಗಡ್ಡೆಯನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮೊಸಳೆ ಪಾರ್ಕ್ ನಿರ್ಮಾಣ ಸೇರಿದಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಮಳೆ ಕೊರತೆಯ ಪರಿಸ್ಥಿತಿ ಮುಂದುವರಿದರೆ ಸರ್ಕಾರ ಬರ ಪರಿಹಾರ ಘೋಷಿಸಲಿದೆ. ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಬೆಳೆ ಹಾನಿಯಾದಲ್ಲಿ ವಿಮಾ ಪರಿಹಾರ ಪಡೆಯಲು ಇದು ಸಹಕಾರಿಯಾಗಲಿದೆ ಎಂದು ರೈತರಿಗೆ ಸಲಹೆ ನೀಡಿದರು.
ಬಳಿಕ ನಾರದಗಡ್ಡೆಗೆ ಭೇಟಿ ನೀಡಿ, ನಾರದಸ್ವಾಮಿ ಮೂಲಸ್ಥಳದಲ್ಲಿ ದರ್ಶನ ಪಡೆದ ಅವರು, ಕೃಷ್ಣಾ ನದಿಯ ಸ್ನಾನಘಟ್ಟ ಕಾಮಗಾರಿಯನ್ನೂ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಮಟ್ಟದ ಸಮಿತಿಯ ಉಪಾಧ್ಯಕ್ಷರಾದ ನಾಗೇಂದ್ರ ಮಟಮಾರಿ, ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್, ಪಿಡ್ಲೂಡಿ ಇಲಾಖೆಯ ಇಇ ಆನಂದ, ಮಹೇಶ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮುಖಂಡರು ಇದ್ದರು.






