ರಾಯಚೂರು | ಕುಡಿಯುವ ನೀರಿಗಾಗಿ ನಮ್ಮ ಕರ್ನಾಟಕ ಸೇನೆಯಿಂದ ಪ್ರತಿಭಟನೆ

ರಾಯಚೂರು: ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಜೆಜೆಎಂ ಮತ್ತು ಜಲಧಾರೆ ಯೋಜನೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ತಕ್ಷಣ ನೀರು ಒದಗಿಸಬೇಕು ಎಂದು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.
ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಉದ್ಯಾನವನದವರೆಗೆ ರ್ಯಾಲಿ ನಡೆಯಿತು. ಈ ವೇಳೆ ಪ್ರತಿಭಟನಾನಿರತರು ಕುಡಿಯುವ ನೀರಿನ ಬೇಡಿಕೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು. ಯೋಜನೆಗಳಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ದಿಕ್ಕಾರ ಹಾಕಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜೆಜೆಎಂ ಮತ್ತು ಜಲಧಾರೆ ಕುಡಿಯುವ ನೀರಿನ ಯೋಜನೆ ಮೂರು ಹಂತಗಳಲ್ಲಿ ಕಾಮಗಾರಿ ಮಾಡುವಲ್ಲಿ ವಿಫಲವಾಗಿದೆ. ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಜನತೆಗೆ ನೀರು ಒದಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಸ್ಥಳೀಯರಿಗೆ ಕೆಲಸ ನೀಡಬೇಕು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್, ಬೀದಿದೀಪ ಅಳವಡಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಬೇಡಿಕೆಗಳು :
• ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರ ವಿರುದ್ಧ ಕ್ರಮ.
• ರಸ್ತೆ ಮಧ್ಯದಲ್ಲಿ ಪೈಪ್ ಲೈನ್ ಹಾಕುವ ಕೆಲಸವನ್ನು ನಿಲ್ಲಿಸಿ, ರಸ್ತೆ ಬದಿಯಲ್ಲಿ ಪೈಪ್ ಅಳವಡಿಕೆ.
• ಗ್ರಾಮಗಳಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ, ಮುಖಂಡರು ವೀರೇಶ ಜಲಗಾರ, ನಾಗರಾಜ, ಮಾಣಿಕ್ ಇಂಗಳೆ, ವೆಂಕಟೇಶ ಎಂ.ಎಸ್., ರಘುನಾಥ್, ಚಿದಾನಂದ, ಬೀಮನಗೌಡ, ಶಿವರಾಜ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದರು.







