ರಾಯಚೂರು : ದತ್ತು ಮಾಸಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ

ರಾಯಚೂರು : ಅನಾಥ, ನಿರ್ಗತಿಕ ಹಾಗೂ ಪರಿತ್ಯಕ್ತ ಮಕ್ಕಳಿಗೂ ಕೂಡ ಪ್ರೀತಿ, ವಾತ್ಸಲ್ಯ, ಮಮತೆ ನೀಡಬೇಕು. ಅನಾಥ ಮಕ್ಕಳನ್ನು ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಗಣೇಶ್ ಕೆ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣಾ ಸಭಾಂಗಣದಲ್ಲಿ ದತ್ತು ಮಾಸಾಚರಣೆ ಪ್ರಯುಕ್ತ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಗಣೇಶ್ ಕೆ, ಪ್ರಸ್ತುತ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ತೆಗೆದುಕೊಂಡು ಹೊಸ ಬದುಕಿಗೆ ಅವಕಾಶ ಮಾಡಿಕೊಡಲು ಜನತೆಯು ಮುಂದೆ ಬರಲು ಜನಜಾಗೃತಿ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕಿರಲಿಂಗಪ್ಪ ಮಾತನಾಡಿ, ಯಾವುದೋ ಕಾರಣ, ಸಂದಿಗ್ಧ ಸನ್ನಿವೇಶಗಳಿಂದ ಕಂದಮ್ಮಗಳನ್ನು ಬೀದಿ, ತಿಪ್ಪೆ, ಕಾಲುವೆ ಬದಿ ಬಿಟ್ಟುಹೋಗುವ ಹಲವಾರ ಉದಾಹರಣೆಗಳಿವೆ. ಇಂತ ಸಂದರ್ಭದಲ್ಲಿ 1098ಗೆ ಕರೆಮಾಡಿ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ ಮಗುವನ್ನು ಒಪ್ಪಿಸಿದಲ್ಲಿ ಮಕ್ಕಳನ್ನು ಸಾಕುವ ಅದೆಷ್ಟೊ ಪಾಲಕರಿಗೆ "ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ-2015" ರಡಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದ ಮಾರ್ಗಸೂಚಿಯನ್ವಯ ದತ್ತು ನೀಡಲಾಗುತ್ತಿದೆ. ದಯವಿಟ್ಟು ಯಾರೂ ನವಜಾತ ಶಿಶು ಹಾಗೂ ಮಕ್ಕಳನ್ನು ಅನಾಥವಾಗಿಸಬೇಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಮ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಶಿವಕುಮಾರ್, ಡಾ.ಶೀತಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಿವೈಹೆಚ್ಓ ಬಸಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.







