Raichur | ಗಡಿ ಭಾಗದ ಕನ್ನಡ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜೂ.18ರಂದು ಜಾಗೃತಿ ಜಾಥಾ

ರಾಯಚೂರು: ಗಡಿ ಭಾಗದ ಕನ್ನಡ ಶಾಲೆಗಳ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ವ್ಯಾಪಾರ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಯನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕನ್ನಡ ಸೇನೆ ಜಿಲ್ಲಾ ಘಟಕದ ವತಿಯಿಂದ ಜೂನ್ 18ರಂದು ಕನ್ನಡ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಂ. ಬಸವರಾಜ ತಿಳಿಸಿದರು.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ ಹಾಗೂ ಕನ್ನಡ ಚಿತ್ರರಂಗದ ನಟ ಟೆನ್ನಿಸ್ ಕೃಷ್ಣ ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜೂನ್ 18ರಂದು ಬೆಳಿಗ್ಗೆ 10.30ಕ್ಕೆ ಬೈಕ್ ರ್ಯಾಲಿ ಮೂಲಕ ಕನ್ನಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಗುತ್ತದೆ. ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಜಾಥಾ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದೆ ಎಂದು ವಿವರಿಸಿದರು.
ಸುಮಾರು 200ರಿಂದ 300 ಬೈಕ್ಗಳೊಂದಿಗೆ ಜಾಥಾ ನಡೆಯಲಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ. ಕನ್ನಡ ಪರ ಹೋರಾಟಕ್ಕೆ ಬೆಂಬಲವಾಗಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷ ಹನುಮೇಶ ನಾಯುಕ, ಉಪಾಧ್ಯಕ್ಷ ನಾಗಪ್ಪ, ಗೋವಿಂದ ಚವ್ಹಾಣ, ಅಮರೇಶ ನಾಯಕ, ಶರಣೋಜಿ ಪವಾರ, ಬಿ.ಮಂಜುನಾಥ, ತಾಯಪ್ಪ ಕಾರ್ಪೆಂಟರ್, ನಾಗಲಿಂಗಪ್ಪಗೌಡ, ವಾಸುದೇವ ಇದ್ದರು.






