Raichur | ಹೊಸ ರಾಜಕೀಯ ಪರ್ಯಾಯ ಪಕ್ಷ ನಿರ್ಮಾಣಕ್ಕೆ ಚೇತನ್ ಅಹಿಂಸಾ ಕರೆ

ರಾಯಚೂರು: ರಾಜ್ಯದಲ್ಲಿ ಹೊಸ ರಾಜಕೀಯ ಪರ್ಯಾಯವನ್ನು ನಿರ್ಮಿಸುವ ಉದ್ದೇಶದಿಂದ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ ನಗರದ ನೃಪತುಂಗ ಹೋಟೆಲ್ನಲ್ಲಿ ಭಾನುವಾರ ರಾಜಕೀಯ ಮುನ್ನೋಟ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಚೇತನ್ ಅಹಿಂಸಾ, ಜನಸಾಮಾನ್ಯರ ಏಳಿಗೆ ಹಾಗೂ ಸಮ ಸಮಾಜದ ನಿರ್ಮಾಣಕ್ಕಾಗಿ ಹೊಸ ರಾಜಕೀಯ ಪಕ್ಷವನ್ನು ಕಟ್ಟುವ ಅಗತ್ಯವಿದೆ ಎಂದು ಹೇಳಿದರು.
ಪ್ರಸ್ತುತ ರಾಜಕೀಯ ವ್ಯವಸ್ಥೆಗೆ ಪರ್ಯಾಯವಾಗಿ ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ತತ್ವಗಳ ಆಧಾರದ ಮೇಲೆ ಹೊಸ ರಾಜಕೀಯ ಪಕ್ಷವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
2028ರಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಗುರಿ ಹೊಂದಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಬದಲಾವಣೆಗೆ ಮುನ್ನುಡಿ ಬರೆಯುವ ಸಂಕಲ್ಪವಿದೆ. ಸಮಾನತೆಯನ್ನು ಬಯಸುವ ಎಲ್ಲರೂ ಈ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಆಶಯಗಳಿಗೆ ಸಮರ್ಪಕ ಪ್ರತಿನಿಧಿತ್ವ ದೊರೆಯುತ್ತಿಲ್ಲ. ಆದ್ದರಿಂದ ಯುವಜನರು, ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ ಜನಪರ ಹಾಗೂ ಸಂವಿಧಾನಬದ್ಧ ರಾಜಕೀಯ ಪರ್ಯಾಯವನ್ನು ನಿರ್ಮಿಸುವುದು ಈ ಪ್ರಯತ್ನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ರಾಜ್ಯದ ಸಮಕಾಲೀನ ರಾಜಕೀಯ ಬೆಳವಣಿಗೆಗಳು, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮುಂದಿನ ರಾಜಕೀಯ ದಿಕ್ಕಿನ ಕುರಿತು ವ್ಯಾಪಕ ಚರ್ಚೆ ನಡೆಯಿತು. ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.






