Raichur | ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್ನಿಂದ ಪಂಜಿನ ಮೆರವಣಿಗೆ
ಅಮಿತ್ ಶಾ ಭಾವಚಿತ್ರ ದಹಿಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ

ರಾಯಚೂರು: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾನೂನು ಸಲಹೆಗಾರ ಹನುಮೇಶ ನಾಯಕ, ಈಡಿ ದಾಳಿಗಳು ಕೇವಲ ಕಾಂಗ್ರೆಸ್ ನಾಯಕರ ಮನೆಗಳ ಮೇಲೆಯೇ ನಡೆಯುತ್ತಿವೆ ಎಂದು ಆರೋಪಿಸಿದರು.
ಇದುವರೆಗೆ 196 ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ನಡೆಸಿ ತೊಂದರೆ ನೀಡಲಾಗಿದೆ. ಆದರೆ ದಾಳಿ ನಡೆದ ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಶಿಕ್ಷೆಯಾಗಿರುವುದು ಕೇವಲ ಎರಡು ಪ್ರಕರಣಗಳಲ್ಲಿ ಮಾತ್ರ. ಇದರಿಂದ ದಾಳಿಗಳ ಉದ್ದೇಶ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸುವುದೇ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಸಿಬಿಐ, ಆದಾಯ ತೆರಿಗೆ ಇಲಾಖೆ (ಐಟಿ) ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದ್ದು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಈ ಕ್ರಮಗಳು ನಡೆಯುತ್ತಿವೆ ಎಂದು ದೂರಿದರು.
ಸಚಿವ ಸತೀಶ್ ಜಾರಕಿಹೊಳಿ ಒಬ್ಬಂಟಿಯಲ್ಲ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಅವರ ಬೆಂಬಲಕ್ಕೆ ನಿಂತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಧೈರ್ಯ ತುಂಬಿದ್ದಾರೆ ಎಂದು ತಿಳಿಸಿದರು.
ಬಿಜೆಪಿಗೆ ಸಂವಿಧಾನ, ನೀತಿ ಹಾಗೂ ಕಾನೂನಿಗಿಂತ ವಿರೋಧ ಪಕ್ಷದ ನಾಯಕರನ್ನು ಬೆದರಿಸಿ ದುರ್ಬಲಗೊಳಿಸುವುದೇ ಉದ್ದೇಶವಾಗಿದೆ ಎಂದು ಹನುಮೇಶ ನಾಯಕ ಆರೋಪಿಸಿದರು.
ಪ್ರತಿಭಟನೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮುಹಮ್ಮದ್ ಶಾಲಂ, ಕೆ.ಇ ಕುಮಾರ, ಸೈಯದ್ ನೂರುದ್ದೀನ್ ಹುಸೇನಿ, ಮುಹಮ್ಮದ್ ಶೋಯೆಬ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.






