ರಾಯಚೂರು | ತೀವ್ರ ಅತಿಸಾರ ಬೇಧಿ ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಿ: ಜಿಪಂ ಸಿಇಓ ಸಲಹೆ

ರಾಯಚೂರು: ತೀವ್ರ ಅತಿಸಾರ ಬೇಧಿ ನಿಯಂತ್ರಣಕ್ಕಾಗಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಸಭಾಂಗಣದಲ್ಲಿ ಜೂ.17ರಂದು ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಅತಿಸಾರ ಬೇಧಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. 0-5 ವರ್ಷದೊಳಗಿನ ಮಕ್ಕಳಿಗೆ ಓ.ಆರ್.ಎಸ್ ಪ್ಯಾಕೆಟ್ ವಿತರಿಸುವಂತೆ ತಿಳಿಸಿದರು.
ಸಾರ್ವಜನಿಕರಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಲು, ಶೌಚಾಲಯ ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ, ಅಂಗನವಾಡಿ ಮೇಲ್ವಿಚಾರಕರಿಗೆ ಶಾಲಾ ಕಾಲೇಜಗಳಲ್ಲಿ ಕೈತೊಳೆಯುವ ವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಶುಚಿತ್ವ ಕಾಪಾಡಬೇಕೆಂದರು.
ಮಕ್ಕಳ ತಜ್ಞರಾದ ಡಾ.ಸಂಜೀವ ಚಟ್ಟಿ ಅವರು ಮಾತನಾಡಿ, 0-5 ವರ್ಷದ ಮಕ್ಕಳಲ್ಲಿ ತೀವ್ರತರ ಅತೀಸಾರ ಬೇಧಿ ಆದಲ್ಲಿ ಮಕ್ಕಳು ನಿರ್ಜಲೀಕರಣಕ್ಕೆ ಒಳಗಾಗಿ ತುಂಬಾ ತೊಂದರೆ ಅನುಭವಿಸುತ್ತವೆ. ಅಂತಹ ಸಮಯದಲ್ಲಿ ಓ.ಆರ್.ಎಸ್ ದ್ರಾವಣ ಮತ್ತು ಜಿಂಕ್ ಔಷಧಿ ಬಳಸಬೇಕು. ಹಾಗೂ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆ ತರಲು ತಿಳಿಸಿದರು.
ಇದೆ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅತಿಸಾರ ಬೇಧಿ ನಿಯಂತ್ರಣ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಡಾ.ವಿಜಯ ಶಂಕರ, ಡಾ.ನಂದಿತಾ, ಕೆ.ಡಿ.ಬಡಿಗೇರ, ನವೀನ್, ಜಿಲ್ಲಾ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.







