ರಾಯಚೂರು| ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಮೃತಪಟ್ಟ ಬಾಲಕರ ಕುಟುಂಬಸ್ಥರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ: ನೆರವಿನ ಭರವಸೆ

ರಾಯಚೂರು: ನಗರದ ಜಹೀರಾಬಾದ್ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಅವರು ರವಿವಾರ ಮೃತ ಬಾಲಕರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನಗರದ ಎಂ.ಈರಣ್ಣ ವೃತ್ತದಲ್ಲಿ ನಡೆದಿದ್ದ ಮೆರವಣಿಗೆಯ ವೇಳೆ ಸಂಭವಿಸಿದ ದುರಂತದ ಕುರಿತು ಕುಟುಂಬಸ್ಥರಿಂದ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಮಾಹಿತಿ ಪಡೆದರು.
ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಸೇರಿದಂತೆ ಲಭ್ಯವಿರುವ ನೆರವು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕುಟುಂಬಗಳಿಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಈ ವೇಳೆ ಭರವಸೆ ನೀಡಿದರು. ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ದೊರಕಿಸಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಜೋನಲ್ ಆಯುಕ್ತ ಮಲ್ಲಿಕಾರ್ಜುನ, ವಾರ್ಡ್ನ ಮಾಜಿ ಸದಸ್ಯರು, ತಾಲೂಕು ದಂಡಾಧಿಕಾರಿಗಳು, ಹಿರಿಯ ಮುಖಂಡರು, ಗಜಾನನ ಮಂಡಳಿಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




