Raichur | ಲಿಂಗಸುಗೂರಿನಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ
ಪ್ರತಿಯೊಂದು ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ತ್ವರಿತವಾಗಿ ಪರಿಹರಿಸಲಾಗುವುದು: ಡಿಸಿ ಪೂವಿತಾ ಎಸ್.

ರಾಯಚೂರು : ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆಬಾಗಿಲಿಗೆ ಆಡಳಿತ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಜಾರಿಗೊಳಿಸಲಾಗಿದ್ದು, ಸಾರ್ವಜನಿಕರಿಂದ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಇಲಾಖೆಗಳ ಸಮನ್ವಯದೊಂದಿಗೆ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಿ ಸರ್ಕಾರದ ಸೌಲಭ್ಯಗಳನ್ನು ಮನೆಬಾಗಿಲಿಗೇ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಈ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ನಿರಂತರವಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ ಎಂದು ಹೇಳಿದರು.
ಬರ ಪರಿಹಾರಕ್ಕೆ ಇಲಾಖೆಗಳ ಸಮನ್ವಯ :
ಲಿಂಗಸುಗೂರು ತಾಲೂಕು ತೀವ್ರ ಬರಪೀಡಿತ ಪ್ರದೇಶವಾಗಿದ್ದು, ಸರ್ಕಾರ ಈಗಾಗಲೇ ಬರಪೀಡಿತ ತಾಲೂಕು ಎಂದು ಘೋಷಿಸಿದೆ. ಬೆಳೆ ಕಟಾವು ಪ್ರಯೋಗಗಳು ಸೇರಿದಂತೆ ಬರ ಪರಿಹಾರಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳು ವಿವಿಧ ಇಲಾಖೆಗಳ ಸಮನ್ವಯದಲ್ಲಿ ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್, ವಿದ್ಯಾರ್ಥಿ ನಿಲಯಗಳು ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಈ ವೇದಿಕೆಯ ಮೂಲಕ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಸಾರ್ವಜನಿಕರ ಅರ್ಜಿಗಳಿಗೆ ತ್ವರಿತ ಸ್ಪಂದನೆ :
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಮಾತನಾಡಿ, ಮಾನ್ವಿ ತಾಲೂಕಿನ ಬಳಿಕ ಲಿಂಗಸುಗೂರಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಆಗಮಿಸಿದ್ದಾರೆ ಎಂದರು.
ಲಿಂಗಸುಗೂರು ತಾಲೂಕಿನ 30 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಆರೋಗ್ಯ, ಅಪೌಷ್ಟಿಕತೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಹೆಚ್ಚಾಗಿದ್ದು, ಮಳೆ ಕೊರತೆಯಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದ್ದು, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಮಟ್ಟದಲ್ಲಿ ಇತ್ಯರ್ಥಗೊಳ್ಳಬೇಕಾದ ವಿಷಯಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸರ್ಕಾರವೇ ಜನರ ಬಳಿಗೆ :
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ಮಾತನಾಡಿ, ಸರ್ಕಾರ ಎಂದರೆ ಕೇವಲ ಆಡಳಿತ ನಡೆಸುವುದಲ್ಲ; ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವುದೇ ಅದರ ಕರ್ತವ್ಯವಾಗಿದೆ ಎಂದರು.
ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಸೇವಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ರೈತರಿಗೆ ಕೃಷಿ ಸಲಕರಣೆ ವಿತರಣೆ :
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಅರ್ಹ ರೈತರಿಗೆ ಕ್ರಿಮಿನಾಶಕ ಸಿಂಪಡಿಸುವ ಯಂತ್ರ, ಬಿತ್ತನೆ ಉಪಕರಣಗಳು, ರೋಟರ್, ನೀರಿನ ಪೈಪ್ ಸೇರಿದಂತೆ ವಿವಿಧ ಕೃಷಿ ಸಲಕರಣೆಗಳನ್ನು ವಿತರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ಸಹ ವಿತರಿಸಲಾಯಿತು.
ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳು :
ಪ್ರಜಾಸೇವಾ ಆಂದೋಲನ ಅಂಗವಾಗಿ ಆಹಾರ, ಅಗ್ನಿಶಾಮಕ, ಕೃಷಿ, ಅರಣ್ಯ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಆರೋಗ್ಯ, ತೋಟಗಾರಿಕೆ, ಖಜಾನೆ, ಅಬಕಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ, ಪಶುಪಾಲನೆ, ರೇಷ್ಮೆ, ಸಮಾಜ ಕಲ್ಯಾಣ, ಯುವನಿಧಿ, ಉಪ ನೋಂದಣಿ, ಅಲ್ಪಸಂಖ್ಯಾತರ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಹಾಗೂ ಭೂಮಾಪನ ಸೇರಿದಂತೆ ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಲಿಂಗಸುಗೂರು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ್, ಲಿಂಗಸುಗೂರು ತಹಶಿಲ್ದಾರ್ ಸತ್ಯಮ್ಮ, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಎಮ್.ಎನ್., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ಗುತ್ತೇದಾರ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಜಿ., ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ಅಬಕಾರಿ ಇಲಾಖೆಯ ಉಪ ನಿರೀಕ್ಷಕಿ ಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸರಸ್ವತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಲಿಂಗಸುಗೂರಿನ ಪಟ್ಟಣದ ಸಾರ್ವಜನಿಕರು ಉಪಸ್ಥಿತರಿದ್ದರು.






